ಬೆಂಗಳೂರು : ಕೋರ್ಟ್ ಆದೇಶದ ಹೊರತಾಗಿಯೂ ಅನಧಿಕೃತವಾಗಿ ಉಳುಮೆ ಮಾಡುತ್ತಿರುವ ಭೂಮಿಯನ್ನು ಸಕ್ರಮಗೊಳಿಸಲು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ಆದೇಶಿಸಲು ಸಮಿತಿ ರಚಿಸದ ಕುರಿತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ.ಮಂಗಳೂರು ತಾಲೂಕಿನ ಹರೇಕಳ ಗ್ರಾಮದ ನಿವಾಸಿ ಜೊರೆಮ್ ಡಿಸೋಜ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ನಡೆಯಿತು.ಈ ವೇಳೆ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ ಪ್ರತಿವಾದಿಗಳಾಗಿರುವ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿದೆ.ರಾಜ್ಯದಲ್ಲಿ ಅನಧಿಕೃತವಾಗಿ ಉಳುಮೆ ಮಾಡುತ್ತಿರುವ ಭೂಮಿಯನ್ನು ಸಕ್ರಮಗೊಳಿಸಲು ಮತ್ತು ಆ ಜಮೀನಿನಲ್ಲಿ ಉಳುಮೆ ಮುಂದುವರಿಸಲು ಅನುಮತಿಸಲು ಕೋರಿ ಹಲವು ಮಂದಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆ ಮನವಿಯನ್ನು ಸಕ್ಷಮ ಸಮಿತಿ ಪರಿಶೀಲನೆ ನಡೆಸಬೇಕಿದೆ. ಹಾಗಾಗಿ, ಸಮಿತಿ ರಚಿಸಲು ಸರ್ಕಾರಕ್ಕೆ  ನಿರ್ದೇಶಿಸಬೇಕು ಎಂದು ಕೋರಿ ಕೋಲಾರದ ಭವರಹಳ್ಳಿ ನಿವಾಸಿ ಮಂಜುನಾಥ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ 20ಕ್ಕೂ ಅಧಿಕ ಮಂದಿ 2019ರಲ್ಲಿ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿ 2023ರ ಜು.14ರಂದು ವಿಚಾರಣೆಗೆ ಬಂದಾಗ ಸರ್ಕಾರಿ ವಕೀಲರು ಹಾಜರಾಗಿ, ಸರ್ಕಾರ ಸಮಿತಿಯು ರಚನೆ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಸಮಿತಿ ರಚನೆಯಾದ ನಂತರ ಅರ್ಜಿದಾರರ ಮನವಿಗಳನ್ನು ಪರಿಗಣಿಸಿ ಕಾನೂನು ಪ್ರಕಾರ ಇತ್ಯರ್ಥ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಈ ಹೇಳಿಕೆ ದಾಖಲಿಸಿಕೊಂಡಿದ್ದ ಹೈಕೋರ್ಟ್ ಏಕ ಸದಸ್ಯ ಪೀಠ, ಅರ್ಜಿದಾರರ ಮಾದರಿಯಲ್ಲಿಯೇ ಇತರೆ ಅನೇಕ ಜನರು ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರವು ಆದ್ಯತೆ ಮೇರೆಗೆ ಶೀಘ್ರ ಸಮಿತಿ ರಚಿಸಬೇಕಿದೆ. ಹಾಗಾಗಿ, 2023ರ ಡಿ.15ರೊಳಗೆ ಸಮತಿ ರಚನೆ ಮಾಡಬೇಕು ಎಂದು ನಿರ್ದೇಶಿಸಿ ಅರ್ಜಿಗಳನ್ನು ಇತ್ಯರ್ಥಪಡಿಸಿತ್ತು. ಏಕ ಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿ ಮೂರು ತಿಂಗಳು ಕಳೆದರೂ ರಾಜ್ಯ ಸರ್ಕಾರ ಮಾತ್ರ ಇನ್ನೂ ಸಮಿತಿ ರಚನೆ ಮಾಡಿಲ್ಲ. ಆದ್ದರಿಂದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಕೈಗೆತ್ತಿಕೊಳ್ಳಬೇಕು ಎಂದು ಕೋರಿ ಜೋರೆಮ್ ಡಿಸೋಜ ಇದೀಗ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.