ಬೆಂಗಳೂರು:‌ ಕಳೆದ ಬಿಜೆಪಿ ಸರಕಾರದ ವಿರುದ್ಧ ವಿಧಾನಸಭಾ ಚುನಾವಣೆ  ವೇಳೆ ಶೇ.40 ಕಮಿಷನ್ ‌ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.ಬಿಜೆಪಿ ವಿರುದ್ಧ ಶೇ.40 ಕಮಿಷನ್ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಬಿಜೆಪಿಯ ಕಾರ್ಯದರ್ಶಿ ಎಂಎಲ್ಸಿ ಕೇಶವ್ ಪ್ರಸಾದ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಧೀಶೆ ಜೆ.ಪ್ರೀತ್ ವಿಚಾರಣೆ ನಡೆಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್​ ನೀಡಿದ್ದರೆ, ರಾಹುಲ್ ಗಾಂಧಿಗೆ ಜೂನ್​ 1ಕ್ಕೆ ಹಾಜರಾಗಲು ಸೂಚಿಸಲಾಗಿದೆ.ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚನೆ ನೀಡಿದರೆ, ಸಿಎಂಗೆ ಸಮನ್ಸ್ ಜಾರಿ ಮಾಡಲು ಹೈಗ್ರೌಂಡ್ಸ್ ಪೊಲೀಸರಿಗೆ ನಿರ್ದೇಶನ ನೀಡಿದೆ.ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ಪರ ವಕೀಲರು ಅರ್ಜಿ ಸಲ್ಲಿಸಿದರು. ಹೀಗಾಗಿ ರಾಹುಲ್ ಗಾಂಧಿ ಅವರು ಜೂನ್ 1ರಂದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾಯಧೀಶೆ ಜೆ.ಪ್ರೀತ್ ಅವರು ಆದೇಶಿಸಿದ್ದಾರೆ.