ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ(2013-18) ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 1.30 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾದ  ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ.2013 ರಿಂದ 2018 ರವರೆಗೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.​​​ಆರ್ ರಮೇಶ್‌ ಖಾಸಗಿ ದೂರು ಸಲ್ಲಿಸಿದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕಿಂಗ್ಸ್ ಕೋರ್ಟ್​​ನ ಎಲ್. ವಿವೇಕಾನಂದ ಎಂಬವರಿಂದ 1.30 ಕೋಟಿ ರೂ. ಹಣ ಪಡೆದ್ದಾರೆ ಎಂದು ಆರೋಪ ಮಾಡಲಾಗಿತ್ತು.ಹಣ ಪಡೆದು ವಿವೇಕಾನಂದ ಅವರನ್ನು 2014 ರಲ್ಲಿ ಟರ್ಫ್ ಕ್ಲಬ್ ಸ್ಟೀವರ್ಡ್ ಹುದ್ದೆಗೆ ನೇಮಕ ಮಾಡಲಾಗಿದೆ ಎಂದು ಖಾಸಗಿ ದೂರಿನಲ್ಲಿ ಆರೋಪಿಸಲಾಗಿತ್ತು. ವಿವೇಕಾನಂದ ಅವರನ್ನು 3 ವರ್ಷದ ಅವಧಿಗೆ ನೇಮಕಮಾಡಿ ಸರಕಾರ ಆದೇಶ ಹೊರಡಿಸಿತ್ತು. ಈ ಬಗ್ಗೆ ಲೋಕಾಯುಕ್ತಕ್ಕೂ ಎನ್‌.ಆರ್ ರಮೇಶ್ ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆದು, ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಾಗಿಲ್ಲವೆಂದು ಬಿ ರಿಪೋರ್ಟನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.‌ ಆದರೆ ನ್ಯಾಯಾಲಯ, ಲೋಕಾಯುಕ್ತ ಪೊಲೀಸರು ಸೂಕ್ತವಾದ ತನಿಖೆ ನಡೆಸಿಲ್ಲ. ತನಿಖೆ ಕಾನೂನು ಪ್ರಕಾರ ನಡೆದಿಲ್ಲವೆಂದು ಅಭಿಪ್ರಾಯ ಪಟ್ಟು ಬಿ ರಿಪೋರ್ಟ್‌ ತಿರಸ್ಕರಿಸಿದೆ. ಕಾನೂನು ಪ್ರಕಾರ ಆರು ತಿಂಗಳಲ್ಲಿ ಮರುತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.