ಶಿವಮೊಗ್ಗ: ನಾಳೆಯಿಂದ (ಫೆ.22 ) ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.  ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯ ಸರಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಫೆ. 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ" ಎಂದು ಹೇಳಿದರು.ಶಿವಮೊಗ್ಗ ಜಿಲ್ಲೆಗೆ 100 ಹೊಸ ಕೆಎಸ್ಸಾರ್ಟಿಸಿ ಬಸ್ ಕೇಳಿದ್ದೆ. ಸದ್ಯಕ್ಕೆ 10 ಬಸ್ ಬಂದಿದೆ. ಫೆ.24 ರಂದು ನಡೆಯುವ ಗ್ಯಾರಂಟಿ ಸಮಾವೇಶದಲ್ಲಿ ಬಸ್ ಉದ್ಘಾಟಿಸಲಾಗುವುದು ಎಂದು ತಿಳಿಸಿದರು.ಕೆಎಫ್​ಡಿ ಕಾಯಿಲೆಯಿಂದ ಮೃತಪಟ್ಟವರಿಗೆ ಪರಿಹಾರ ಕೊಡುವ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಕೆಎಫ್​ಡಿಯಿಂದ ಮೃತಪಟ್ಟವರಿಗೆ ಪರಿಹಾರ ಕೊಡಬೇಕು ಎಂದು ಸರಕಾರದ ಗಮನಕ್ಕೆ ತಂದಿದ್ದೇನೆ. ಕೆಎಫ್​ಡಿಯಿಂದ ಮೃತಪಟ್ಟವರ ಮಾಹಿತಿ ಕೊಡಲು ಸೂಚಿಸಿದ್ದೇನೆ. ಪರಿಹಾರ ಕೊಡುವ ಬಗ್ಗೆ ಗಮನ ಹರಿಸಲಾಗುವುದು ಎಂದರು.  