 ಬೆಂಗಳೂರು : ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಮತ್ತು ಮಾದಕ ಪದಾರ್ಥಗಳ ಹಾವಳಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ಈ ಸಂಬಂಧ ಶಾಸಕ ದಿನೇಶ್‌ ಗೂಳಿಗೌಡ ಬರೆದಿದ್ದ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿ, ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ.ಮಾದಕ ವ್ಯಸನಗಳಿಗೆ ಹೆಚ್ಚಿನ ಸಂಖ್ಯೆಯ ಮಕ್ಕಳು ಬಲಿಯಾಗುತ್ತಿರುವ ಬಗ್ಗೆ ಗಮನ ಸೆಳೆದಿದ್ದ ಶಾಸಕ ದಿನೇಶ್‌ ಗೂಳಿಗೌಡ ಅವರು, ತಕ್ಷಣ ಎಚ್ಚೆತ್ತುಕೊಳ್ಳದಿದ್ದರೆ ಆತಂಕಕಾರಿ ಪರಿಸ್ಥಿತಿ ನಿರ್ಮಾಣ ಆಗುತ್ತದೆ. ಆದ್ದರಿಂದ   ಗಾಂಜಾ ಮತ್ತು ಮಾದಕವಸ್ತುಗಳ ಹಾವಳಿ ನಿಯಂತ್ರಣಕ್ಕೆ ಜಿಲ್ಲಾ ಮಟ್ಟದಲ್ಲಿ ವಿಶೇಷ ದಳ ರಚನೆ ಸೇರಿ ಹಲವು ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದರು.ಶಿಕ್ಷಣ ಸಂಸ್ಥೆಗಳ ಸಮೀಪ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ ಮತ್ತು ಸೇವನೆ ಹೆಚ್ಚುತ್ತಿರುವ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್‌ ಮಹಾ ನಿರ್ದೇಶಕರು, ಈ ಬಗ್ಗ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿ, ಈ ಬಗ್ಗೆ ಪರಿಶೀಲನೆ ನಡೆಸಲು ನಿರ್ದೇಶನ ನೀಡಿದ್ದಾರೆ. 