ಬೆಳಗಾವಿ: ರಾಜ್ಯ ವ್ಯಾಪಿ ಮದ್ರಸಾ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ, ಗಣಿತ, ವಿಜ್ಞಾನ ಹಾಗೂ ಸಮಾಜ ಶಾಸ್ತ್ರ ಬೋಧನೆ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.  ಬುಧವಾರ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಖ್ ಪರವಾಗಿ ಅಬ್ದಲ್ ಝಬ್ಬಾರ್ ಕೇಳಿದ ಪ್ರಶ್ನೆಗೆ ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಪರವಾಗಿ ಅವರು ಉತ್ತರಿಸಿದರು.  ಮದ್ರಸಾ ಶಿಕ್ಷಣ ಸಂಸ್ಥೆಗಳಲ್ಲಿನ ಮಕ್ಕಳಿಗೆ ಧಾರ್ಮಿಕ ಬೋದನೆ ಮಾತ್ರವಲ್ಲದೆ ಸಾಮಾಜಿಕ ಬದುಕು ಕಟ್ಟಿಕೊಳ್ಳುವ ಇತರೆ ವಿಷಯಗಳ ಕುರಿತು ಬೋಧನೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಸರಕಾರವೂ ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಂಡಿದೆ ಎಂದು ಅವರು ಮಾಹಿತಿ ನೀಡಿದರು.ರಾಜ್ಯದಲ್ಲಿ ಮುಸ್ಲಿಮ್ ಸಮುದಾಯದ ನೋಂದಾಯಿತ ವಕ್ಫ್ ಆಸ್ತಿಗಳಲ್ಲಿ ಹಾಗೂ ವಕ್ಫ್ ಸಂಸ್ಥೆಗಳಿಂದ ನಡೆಸಲಾಗುತ್ತಿರುವ ಮದ್ರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಪ್ರಾಯೋಗಿಕ ಆಧಾರದ ಮೇಲೆ 2 ವರ್ಷಗಳು ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಹಾಗೂ ಇತರೆ ವಿಷಯಗಳ ಬಗ್ಗೆ ಸತತವಾಗಿ ಬೋಧಿಸಲಾಗುವುದು. ಜತೆಗೆ ಹತ್ತನೇ ತರಗತಿ, ಪಿಯುಸಿ ಮತ್ತು ಪದವಿಯನ್ನು ರಾಜ್ಯ, ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ ನೀಡಲು ಸರ್ಕಾರ ತೀರ್ಮಾನ ಕೈಗೊಳ್ಳಲಾಗಿದೆ ಎಂದೂ ಅವರು ಉಲ್ಲೇಖಿಸಿದರು.  100 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭ: ‘ಮದ್ರಸಾಗಳಲ್ಲಿ ಬೇರೆ ಶಿಕ್ಷಣ ಕೊಡದಿದ್ದಲ್ಲಿ ಪ್ರಚಲಿತ ಸಮಾಜದಿಂದ ಅಲ್ಲಿನ ವಿದ್ಯಾರ್ಥಿಗಳು ವಿಮುಖರಾಗಲಿದ್ದಾರೆ. ಹಾಗಾಗಿ ಬೇರೆ ವಿಷಯಗಳ ಪಾಠ ಮದ್ರಸಾಗಳಲ್ಲಿ ದೊರೆಯಬೇಕು ಎನ್ನುವ ಚರ್ಚೆ ಬಹಳ ವರ್ಷಗಳಿಂದ ಇತ್ತು. ನಮ್ಮ ಸರಕಾರ ಬಂದ ನಂತರ ಈ ಬಗ್ಗೆ ಚರ್ಚಿಸಿದ್ದು, ತಕ್ಷಣವೇ ಈ ವರ್ಷದಿಂದಲೇ ಮದ್ರಸಾಗಳಲ್ಲಿ ಬೇರೆ ವಿಷಯಗಳ ಪಠ್ಯ ಬೋಧನೆ ಮಾಡುವ ಯೋಜನೆ ಅನುಷ್ಠಾನ ಮಾಡಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದೇವೆ. ಅದರಂತೆ 100 ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಆರಂಭ ಮಾಡಲಾಗುತ್ತದೆ’   -ಕೃಷ್ಣ ಭೈರೇಗೌಡ, ಕಂದಾಯ ಸಚಿವ  