.ಬೆಂಗಳೂರು: ನ್ಯಾಯಾಮೂರ್ತಿ ಹೇಮಾ ಸಮಿತಿಯು ಮಲಯಾಳಂ ಚಿತ್ರರಂಗದಲ್ಲಿ ನಡೆದಿರುವ ಲೈಂಗಿಕ ಕಿರುಕುಳದ ಕುರಿತು ಸ್ಪೋಟಕ ಮಾಹಿತಿಯನ್ನು ಬಹಿರಂಗಗೊಳಿಸಿದ್ದು, ಅದೇ ರೀತಿ ಕನ್ನಡ ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ತನಿಖೆ ನಡೆಸಿ ವರದಿ ನೀಡಲು ಸಮಿತಿಯೊಂದನ್ನು ರಚಿಸುವಂತೆ ‘ಫೈರ್‌’ (ಫಿಲ್ಮ್‌ ಇಂಡಸ್ಟ್ರಿ ಫಾರ್ ರೈಟ್ಸ್ ಆಂಡ್ ಇಕ್ವಾಲಿಟಿ ಸಂಸ್ಥೆ) ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.ಹಿರಿಯ ಸಾಮಾಜಿಕ ಕಾರ್ಯಕರ್ತೆ ಡಾ.ವಿಜಯಮ್ಮ, ನಟ ಚೇತನ್, ನಟಿ ಶೃತಿ ಹರಿಹರನ್‌ ನೇತೃತ್ವದ ಫೈರ್ ನಿಯೋಗ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.ಫೈರ್ ನಿಯೋಗದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಈ ವಿಚಾರದ ಕುರಿತು ವಿಸ್ತಾರವಾಗಿ ಚರ್ಚಿಸಬೇಕು, ಮುಂದಿನ ದಿನಗಳಲ್ಲಿ ಈ ಸಂಬಂಧ ಫೈರ್ ಪ್ರತಿನಿಧಿಗಳ ಸೇರಿದಂತೆ ಸಂಬಂಧಪಟ್ಟವರ ಸಭೆ ಕರೆಯುತ್ತೇನೆ ಎಂದು ಭರವಸೆ ನೀಡಿದ್ದಾರೆ’ ಎಂದು ಡಾ.ವಿಜಯಮ್ಮ ಮಾಹಿತಿ ನೀಡಿದರು.  