 ಸಾಂದರ್ಭಿಕ ಚಿತ್ರ(PTI)ಬೆಂಗಳೂರು, ನ.3: ನಗರದ ನ್ಯೂ ತಿಪ್ಪಸಂದ್ರ ಮುಖ್ಯರಸ್ತೆ ಹಾಗೂ ಜ್ಞಾನಭಾರತಿ ಬಳಿ ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಗೋದಾಮುಗಳ ಮೇಲೆ ಸಿಸಿಬಿ ಪೊಲೀಸರು ಶುಕ್ರವಾರ ದಾಳಿ ನಡೆಸಿ, ಮೂವರನ್ನು ವಶಕ್ಕೆ ಪಡೆದು ಒಟ್ಟು 40ಲಕ್ಷ ರೂಪಾಯಿ ಮೌಲ್ಯದ ಪಟಾಕಿಗಳನ್ನು ಜಪ್ತಿ ಮಾಡಿದ್ದಾರೆ.ಯಾವುದೇ ಮುಂಜಾಗ್ರತಾ ಕ್ರಮಗಳು ಹಾಗೂ ಪರವಾನಗಿ ಪಡೆದುಕೊಳ್ಳದೇ ಅನಧಿಕೃತವಾಗಿ ಪಟಾಕಿ ಮಾರಾಟ ನಡೆಸುತ್ತಿರುವ ಮಾಹಿತಿ ಮೇರೆಗೆ ಸಿಸಿಬಿ ದಾಳಿ ನಡೆಸಿದ್ದು, ಜೀವನ್ ಭೀಮಾ ನಗರ ಠಾಣಾ ವ್ಯಾಪ್ತಿಯ ನ್ಯೂ ತಿಪ್ಪಸಂದ್ರ ಮುಖ್ಯರಸ್ತೆಯ ಧಹಿಯಾ ಎಂಬ ಮಾರ್ಟ್‍ನ ಗೋದಾಮಿನಲ್ಲಿ ನಡೆಸಿದ ದಾಳಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆದು 25 ಲಕ್ಷ ರೂ. ಮೌಲ್ಯದ ಪಟಾಕಿಯನ್ನು ಜಪ್ತಿ ಮಾಡಲಾಗಿದೆ.   ಜ್ಞಾನಭಾರತಿ  ಪೊಲೀಸ್ ಠಾಣಾ ವ್ಯಾಪ್ತಿಯ ಮತ್ತೊಂದು ಗೋದಾಮಿನಲ್ಲಿ ನಡೆಸಿದ ದಾಳಿಯಲ್ಲಿ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು 15 ಲಕ್ಷ ರೂ. ಮೌಲ್ಯದ ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ. ಈ ಎರಡು ಗೋದಾಮಿನ ಮಾಲಕರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಾಹಿತಿ ನೀಡಿದ್ದಾರೆ.  