ಬೆಳಗಾವಿ: ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಿರುವ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಕಾರ್ಯಕರ್ತರನ್ನು ಬೆಳಗಾವಿ ಜಿಲ್ಲಾ ಪೊಲೀಸರು ತಡೆದಿದ್ದಾರೆ. ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಬಳಿ  ಶಿವಸೇನೆ ಉದ್ಧವ್ ಠಾಕ್ರೆ ಬಣದ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಗಡಿಯಲ್ಲೇ ತಡೆದ ಪೊಲೀಸರು ವಾಹನದಲ್ಲಿ ವಾಪಸ್ ಕಾಗಲ್‌ಗೆ ಕರೆದುಕೊಂಡು ಹೋದರು. ಆ ಬಳಿಕ ಕೊಲ್ಹಾಪುರ ಪೊಲೀಸರಿಗೆ ಅವರನ್ನು ಒಪ್ಪಿಸಿದರು. ʼಮಹಾರಾಷ್ಟ್ರದ ನಾಯಕರು ಗಡಿ ಪ್ರವೇಶಕ್ಕೆ ಯತ್ನಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕರಾಳ ದಿನ ಆಚರಣೆ ಹೆಸರಲ್ಲಿ ಕಾನೂನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳುತ್ತೇವೆʼ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಎಚ್ಚರಿಕೆ ನೀಡಿದ್ದಾರೆ.   