ಬೆಂಗಳೂರು: ʼʼನಾವು ವೆಸ್ಟಂಡ್‌ ಹೋಟೆಲ್‌ನಲ್ಲಿ ಕೂತು ಸರ್ಕಾರ ನಡೆಸುತ್ತಿಲ್ಲ, ಜನರ ನಡುವೆ ಇದ್ದು ಅವರ ಕಷ್ಟಕ್ಕೆ ಹೆಗಲಾಗಿ ನಿಂತಿದ್ದೇವೆʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ‘ಕಮೀಷನ್ ಆಸೆಗೆ ವಿದ್ಯುತ್ ಕೃತಕ ಅಭಾವ ಸೃಷ್ಟಿಸಲಾಗಿದೆ’ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಂಭಂಧಿಸಿ ಸಾಮಾಜಿಕ ಜಾಲತಾಣ X ನಲ್ಲಿ ಅವರು ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.  ʼʼಮಳೆ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕನಿಷ್ಠ ಮಟ್ಟಕ್ಕೆ ಕುಸಿದಿದೆ, ಇದರಿಂದಾಗಿ ಜಲವಿದ್ಯುತ್ ಉತ್ಪಾದಕ ಘಟಕಗಳು ತಮ್ಮ ಸಾಮರ್ಥ್ಯಕ್ಕೆ ಸಮನಾಗಿ ವಿದ್ಯುತ್ ಉತ್ಪಾದಿಸಲು ಸಾಧ್ಯವಿಲ್ಲದಂತಾಗಿದೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ. ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆʼʼ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ʼʼವಿವಿಧ ಮೂಲಗಳಿಂದ ವಿದ್ಯುತ್‌ ಉತ್ಪಾದನೆಗೆ ಹೇರಳ ಅವಕಾಶವಿದ್ದರೂ ಖಾಸಗಿ ಕಂಪೆನಿಗಳಿಂದ ವಿದ್ಯುತ್‌ ಖರೀದಿಸಲು ರಾಜ್ಯದಲ್ಲಿ ಕೃತಕ ವಿದ್ಯುತ್‌ ಅಭಾವ ಸೃಷ್ಟಿಸಲಾಗಿದೆʼʼ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದ್ದರು.  