ಮಾಲೂರು (ಕೋಲಾರ): ಗ್ರಾಮ ಪಂಚಾಯತ್ ಸದಸ್ಯನೋರ್ವನನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹೊಸೂರು ರಸ್ತೆ ಮಿಣಸಂದ್ರ ಗೇಟ್ ಬಳಿ ಶನಿವಾರ ವರದಿಯಾಗಿದೆ.   ಕೊಲೆಯಾಗಿರುವ ವ್ಯಕ್ತಿಯನ್ನು ತಾಲೂಕಿನ ಮಿಣಸಂದ್ರ ಗ್ರಾಮದ  ಅನೀಲ್ ಕುಮಾರ್ (55) ಎಂದು ಗುರುತಿಸಲಾಗಿದೆ.ಅನಿಲ್ ಕುಮಾರ್ ಜಯಮಂಗಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಿಣಸಂದ್ರ ಗ್ರಾಮದ ಕಾಂಗ್ರೆಸ್ ಬೆಂಬಲಿತ ಸದಸ್ಯನಾಗಿದ್ದ ಎಂದು ತಿಳಿದು ಬಂದಿದೆ.ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಘಟನಾ ಸ್ಥಳಕ್ಕೆ ಪೋಲಿಸ್ ವರಿಷ್ಠಾಧಿಕಾರಿ ನಾರಾಯಣ್, ಡಿವೈಎಸ್ಪಿ ಮಲ್ಲೇಶ್, ಸರ್ಕಲ್ ಇನ್ಸ್‌ಪೆಕ್ಟರ್ ವಸಂತ್ ಬೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.  ಮಾಲೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.   