ಶ್ರೀರಂಗಪಟ್ಟಣ: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಶನಿವಾರ ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.ಈ ಸಂಬಂಧ ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼರಾಜ್ಯ ಸರಕಾರ ಏಕಪಕ್ಷೀಯವಾಗಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಪರಿಣಾಮ ಕೃಷ್ಣರಾಜಸಾಗರ ಜಲಾಶಯ ಬರಿದಾಗಿದೆ. ರಾಜ್ಯದ ಪಾಲಿನ ಸಮೃದ್ಧಿಯ ಸಂಕೇತ ಕನ್ನಂಬಾಡಿ ಅಣೆಕಟ್ಟೆ ಭಣಗುಡುತ್ತಿದೆʼʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.  ಮಾಜಿ ಸಚಿವರಾದ ಜಿ.ಟಿ.ದೇವೇಗೌಡ, ಸಿ.ಎಸ್‌.ಪುಟ್ಟರಾಜು,  ಡಿ.ಸಿ.ತಮ್ಮಣ್ಣ, ಮುನಿರತ್ನ, ಮಾಜಿ ಶಾಸಕರಾದ ಸುರೇಶ್‌ ಗೌಡ, ರವೀಂದ್ರ ಶ್ರೀಕಂಠಯ್ಯ ಮತ್ತು ನಿಖಿಲ್‌ ಕುಮಾರಸ್ವಾಮಿ ಅವರು ಎಚ್.ಡಿಕೆ ಅವರ ಜೊತೆಗಿದ್ದರು.   