ಬೆಂಗಳೂರು: ಇತ್ತೀಚೆಗೆ ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇಯಲ್ಲಿ ಅನೇಕರು ಸಂಚಾರ ನಿಯಮ ಮೀರಿ ವಾಹನ ಚಲಾಯಿಸುತ್ತಿದ್ದು, ಇದರಿಂದ ಹೆಚ್ಚಿನ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಕಠಿಣ ಕ್ರಮ ಜರುಗಿಸಲಾಗಿದೆʼ ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ʼಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇಯ ವಿರುದ್ಧ ದಿಕ್ಕಿನಲ್ಲಿ ವಾಹನ ಚಲಿಸುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು, ವಾಹನದ ಅಪಾಯಕಾರಿ ಚಾಲನೆಯಿಂದಾಗಿ ಚಾಲಕನ ವಿರುದ್ದ ಎಫ್‍ಐಆರ್ ದಾಖಲಿಸಲಾಗಿದೆʼ ಎಂದು ಅವರು ತಿಳಿಸಿದರು. ʼವಾಹನದ ಡಿಎಲ್ ಅನ್ನು ಅಮಾನತುಗೊಳಿಸುವಂತೆ ಶಿಫಾರಸು ಮಾಡುತ್ತೇವೆ. ನೋಟಿಸ್ ಜಾರಿ ಮಾಡಲಾಗಿದೆ. ಇನ್ನು ಮುಂದೆ ಯಾರಾದರೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ಚಾಲಕರ ವಿರುದ್ಧ ಎಫ್‍ಐಆರ್ ದಾಖಲಿಸಿ ಕ್ರಮ ಜರುಗಿಸಲಾಗುವುದುʼ ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದರು.  