ಬೆಂಗಳೂರು. ಸೆ. 4: ಮಾಜಿ ಕೇಂದ್ರ ಸಚಿವ ಅನಂತ ಕುಮಾರ್‌ ರವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರನ್ನು ಸೋಮವಾರ ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ಕುತೂಲ ಸೃಷ್ಟಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಿಎಂ ಗೃಹಕಚೇರಿ ಕೃಷ್ಣಾ ಬಳಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ʼʼತೇಜಸ್ವಿನಿ ಅನಂತಕುಮಾರ್ ಅವರ ಭೇಟಿ ರಾಜಕೀಯ ವಿಚಾರಗಳಿಗೆ ಆಗಿದೆಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,  “ಸಾಧ್ಯವೇ ಇಲ್ಲ, ನಮ್ಮ ನಡುವೆ ಯಾವುದೇ ರಾಜಕೀಯ ವಿಚಾರಗಳು ಚರ್ಚೆಗೆ ಬಂದಿಲ್ಲ. ರಾಜಕೀಯ ವಿಚಾರ ಮಾತನಾಡಿದ್ದೇವೆ ಎಂದು ಯಾರಾದರೂ ಹೇಳಿದ್ದರೆ ಅದು ಸುಳ್ಳುʼʼ ಎಂದು ಸ್ಪಷ್ಟಪಡಿಸಿದರು. ʼʼತೇಜಸ್ವಿನಿ ಅವರು ಅನಂತ್‍ಕುಮಾರ್ ಅವರ ಜನ್ಮದಿನ, ಅನ್ನಭಾಗ್ಯ ವಿಚಾರಗಳ ಬಗ್ಗೆ ನನ್ನ ಜತೆ ಚರ್ಚೆ ಮಾಡಿದರು. ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಲಾಯಿತು ಎಂಬುದು ಸುಳ್ಳು ಸುದ್ದಿ" ಎಂದು ಅವರು ಪುನರುಚ್ಚರಿಸಿದರು. 