ಫೋಟೊ ಕೃಪೆ - twitter@RLR_BTMಬೆಂಗಳೂರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬೆಂಗಳೂರು ಮತ್ತು ಸಿಂಧನೂರು ನಡುವೆ 'ಕಲ್ಯಾಣ ರಥ' ಹೆಸರಿನ ಐಷಾರಾಮಿ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದ್ದು, 1.77 ಕೋಟಿ ರೂ. ವೆಚ್ಚದಲ್ಲಿ ಬಸ್‌ ನಿರ್ಮಾಣವಾಗಿದೆ. ಈ ಐಷಾರಾಮಿ ಬಸ್‌ ಸೇವೆಗೆ ಇತ್ತೀಚೆಗಷ್ಟೇ ಸಿಂಧನೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ ನೀಡಿದ್ದಾರೆ.  ಸಿಂಧನೂರು, ಗಂಗಾವತಿ, ಹೊಸಪೇಟೆ ಮೂಲಕ ಬೆಂಗಳೂರಿಗೆ ಆರಾಮದಾಯಕ ಪ್ರಯಾಣಕ್ಕೆ 1250 ಪ್ರಯಾಣ ದರವನ್ನು ನಿಗದಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.ಬಸ್ ವೇಳಾಪಟ್ಟಿ: ಸಿಂಧನೂರು-ಬೆಂಗಳೂರು ನಡುವಿನ ಐಷರಾಮಿ ಕಲ್ಯಾಣ ರಥ ಬಸ್ ಪ್ರತಿ ದಿನ ಸಿಂಧನೂರಿನಿಂದ ರಾತ್ರಿ 10 ಗಂಟೆಗೆ ಹೊರಡಲಿದೆ. ಕಾರಟಗಿ-ಗಂಗಾವತಿ- ಬೂದುಗುಂಪ ಕ್ರಾಸ್-ಹೊಸಪೇಟೆ- ಕೂಡ್ಲಿಗಿ-ಹಿರಿಯೂರು-ತುಮಕೂರು ಮಾರ್ಗವಾಗಿ ಮರುದಿನ ಬೆಳಗ್ಗೆ ಬೆಂಗಳೂರಿಗೆ 5.30ಕ್ಕೆ ತಲುಪಲಿದೆ. ಬೆಂಗಳೂರಿನಿಂದ ರಾತ್ರಿ 10.15ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 5.45ಕ್ಕೆ ಸಿಂಧನೂರು ತಲುಪಲಿದೆ.ಬಸ್ಸಿನಲ್ಲಿ ಏನೇನಿದೆ? ಸ್ವಯಂ ಚಾಲಿತ ಬಾಗಿಲು ತೆರೆಯುವ ವ್ಯವಸ್ಥೆ, ಬೆಂಕಿ ನಂದಿಸುವ ಉಪಕರಣಗಳ ವ್ಯವಸ್ಥೆ, ವಾಹನದ ಟ್ರ್ಯಾಕಿಂಗ್ ಗುರುತು ವ್ಯವಸ್ಥೆ, ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಬೆಡ್ ಲೈಟ್, ಲ್ಯಾಪ್ ಟಾಪ್ ಬ್ಯಾಗ್ ಇಡುವ ವ್ಯವಸ್ಥೆ ಬಸ್‌ನಲ್ಲಿ ಇದೆ.  