ಎಸ್.ಅಜಿತ್ ಕುಮಾರ್ ರೈಬೆಂಗಳೂರು, ಆ.14: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರಿಗೆ ನಗರದ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಈ ಸಂಬಂಧ ಅಜಿತ್ ಕುಮಾರ್ ರೈ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನಗರದ 24ನೆ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ರಾಧಾಕೃಷ್ಣ ಅವರು, ಅಜಿತ್ ರೈ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಪುತ್ತೂರು ಮೂಲದ ಅಜಿತ್ ರೈ ಈ ಹಿಂದೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯ ವಜಾ ಮಾಡಿತ್ತು.ಲೋಕಾಯುಕ್ತ ಪೊಲೀಸರು ಜೂ.28ರಂದು ಅಜಿತ್ ರೈ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದರು. ವಿಚಾರಣೆಗೆ ಸಹಕರಿಸದ ಆರೋಪದ ಮೇಲೆ ಜೂ.29ರಂದು ಬಂಧಿಸಲಾಗಿತ್ತು, ವಿಚಾರಣೆಗಾಗಿ ಕೆಲವು ದಿನಗಳ ಕಾಲ ತನಿಖಾ ತಂಡದ ವಶಕ್ಕೆ ನೀಡಲಾಗಿತ್ತು.