ಬೆಂಗಳೂರು, ಆ.9: ‘ಕರ್ನಾಟಕ ಸುವರ್ಣ ಮಹೋತ್ಸವ’ದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಾಹಿತಿಗಳು, ರಂಗಕರ್ಮಿಗಳು, ಕಲಾವಿದರೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.  ನವೆಂಬರ್ 1ಕ್ಕೆ ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಸುವ ಬಗ್ಗೆ ಆಯವ್ಯಯದಲ್ಲಿ ಈಗಾಗಲೆ ಘೋಷಣೆ ಮಾಡಲಾಗಿದೆ ಎಂದು ಅವರು ಹೇಳಿದರು.  ರಾಜ್ಯದ ನಾಲ್ಕು ಕಂದಾಯ ವಿಭಾಗವಾರು ಸಾಹಿತಿಗಳ ಸಭೆ ಆಯೋಜನೆ ಮಾಡಲಾಗುವುದು. ಮೊದಲ ಹಂತದಲ್ಲಿ ಬೆಂಗಳೂರು ವಿಭಾಗದಲ್ಲಿ ಸಾಹಿತಿಗಳ ಸಭೆ ನಡೆಸಲಾಗಿದೆ. ಆ.22ಕ್ಕೆ ಬೆಳಗಾವಿ, ಆ.25 ಮೈಸೂರು ಹಾಗೂ 28ರಂದು ಕಲಬುರಗಿಯಲ್ಲಿ ಸಾಹಿತಿ, ರಂಗಕರ್ಮಿ ಹಾಗೂ ಹಿರಿಯ ಕಲಾವಿದರ ಸಭೆ ನಡೆಸಲಾಗುವುದು ಎಂದು ಶಿವರಾಜ ತಂಗಡಗಿ ತಿಳಿಸಿದರು.  ಸಭೆಯಲ್ಲಿ ಕರ್ನಾಟಕದ ಪರಂಪರೆ, ಕನ್ನಡದ ಇತಿಹಾಸ ಹಾಗೂ ಸಂಸ್ಕೃತಿ ಬಿಂಬಿಸುವ ಹಿನ್ನೆಲೆಯಲ್ಲಿ ಕನ್ನಡರಥ ರಾಜ್ಯವಿಡೀ ಸಂಚಾರ ಮಾಡುವುದು, ಶಾಲಾ ಮತ್ತು ಕಾಲೇಜುಗಳಲ್ಲಿ ರಾಜ್ಯಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಆಯೋಜನೆ, ರಾಜ್ಯದ ಸಿದ್ಧಪುರದಲ್ಲಿರುವ ಏಕೈಕ ಭುವನೇಶ್ವರಿ ದೇವಾಲಯವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವುದು, ಕನ್ನಡದ ಮಾಹಿತಿಯನ್ನೊಳಗೊಂಡ ಸಂಚಾರಿ ವಾಹನ, ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಭಾಗಿಯಾಗಿದ್ದ ಗಣ್ಯರ ಸನ್ಮಾನ ಸೇರಿದಂತೆ ಹೀಗೆ ಹಲವು ಸಲಹೆಗಳು ಬಂದಿವೆ ಎಂದು ಅವರು ಹೇಳಿದರು.  ಸಾಹಿತಿಗಳಾದ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಮುಖ್ಯಮಂತ್ರಿ ಚಂದ್ರು, ಮನುಬಳಿಗಾರ್, ಹಂಸಲೇಖ, ಮಾಜಿ ಸಚಿವರಾದ ಉಮಾಶ್ರೀ, ಜಯಮಾಲಾ ಸೇರಿದಂತೆ ಪ್ರತಿಯೊಬ್ಬರು ಸಲಹೆ ನೀಡಿದ್ದಾರೆ. ಇನ್ನು ಉಳಿದ ಮೂರು ವಿಭಾಗಗಳಲ್ಲಿ ಸಭೆ ನಡೆಸಿ, ಎಲ್ಲರ ಸಲಹೆ ಕ್ರೋಢೀಕರಣ ಮಾಡಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.   ಸಭೆಯಲ್ಲಿ ಸಾಹಿತಿಗಳಾದ ಡಾ.ಚಂದ್ರಶೇಖರ ಕಂಬಾರ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಬಿ.ಟಿ.ಲಲಿತಾನಾಯಕ್, ಮನುಬಳಿಗಾರ್, ನರಹಳ್ಳಿ ಬಾಲಕೃಷ್ಣ, ಮುಖ್ಯಮಂತ್ರಿ ಚಂದ್ರು, ಮಾಜಿ ಸಚಿವರಾದ ಉಮಾಶ್ರೀ, ಜಯಮಾಲಾ, ಚಿತ್ರ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು, ಟಿ.ಎನ್.ಸೀತಾರಾಮ್, ಕಸಪಾ ಅಧ್ಯಕ್ಷ ಮಹೇಶ್ ಜೋಶಿ, ರಂಗಕರ್ಮಿಗಳಾದ ಕಪ್ಪಣ್ಣ, ನಾಗರಾಜ್ ಮೂರ್ತಿ, ಪ್ರೊ.ಕೆ.ಇ.ರಾಧಾಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶ್ವನಾಥ್ ಹಿರೇಮಠ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.    ‘ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಸಲು ಯಾವುದೇ ಅಡೆತಡೆಗಳಿಲ್ಲ. ಎಲ್ಲರೊಂದಿಗೆ ಚರ್ಚೆ ಮಾಡಿ ಸಮ್ಮೇಳನದ ದಿನಾಂಕ ನಿಗದಿ ಮಾಡಲಾಗುವುದು. ಈ ಬಗ್ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬಳಿ ಮಾತನಾಡಿದ್ದೇನೆ. ಕಾರ್ಯಕ್ರಮ ನಡೆಸಲು ಹಣಕಾಸಿನ ಕೊರತೆ ಇಲ್ಲ. ಹೆಚ್ಚಿನ ಅನುದಾನದ ಅಗತ್ಯ ಬಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು’-ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿಕ ಸಚಿವ  