ಶಿವಮೊಗ್ಗ: ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.ಶಿಕಾರಿಪುರದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗುತ್ತಾ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು.ಕಾಂಗ್ರೆಸ್ ನಾಯಕ ನಾಗರಾಜ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಬಳಿಕ ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರೂ ಆಗಿರುವ ಅವರ ಬಿ.ವೈ ವಿಜಯೇಂದ್ರ ವಿರುದ್ಧ ದಿಕ್ಕಾರ ಕೂಗುತ್ತಾ, ಯಡಿಯೂರಪ್ಪ ಮನೆಗೆ ಮುತ್ತಿಗೆಗೆ ಪ್ರಯತ್ನಿಸಿದವರನ್ನು ವಶಕ್ಕೆ ಪಡೆದ ಪೊಲೀಸರು, ಬಳಿಕ ಬಿಡುಗಡೆಗೊಳಿಸಿದರು.