ಬೆಂಗಳೂರು, ಆ.1: ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪದಡಿ ಸಿಬಿಐ ದಾಖಲಿಸಿರುವ ಎಫ್‍ಐಆರ್ ರದ್ದುಪಡಿಸುವಂತೆ ಕೋರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿರುವ ಹೈಕೋರ್ಟ್, ಪ್ರಕರಣ ಕುರಿತ ಕೇಸ್ ಡೈರಿಯನ್ನು 2 ದಿನಗಳ ಒಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸಿಬಿಐಗೆ ಸೂಚಿಸಿದೆ.ಡಿಕೆಶಿ ಅವರ ತಕರಾರು ಅರ್ಜಿಗೆ ಸಂಬಂಧಿಸಿದಂತೆ ವಕೀಲರ ವಾದ ಆಲಿಸಿದ ನ್ಯಾಯಪೀಠವು ತೀರ್ಪು ಕಾಯ್ದಿರಿಸಿತು.  ಇದೇ ವೇಳೆ ಡಿ.ಕೆ.ಶಿವಕುಮಾರ್ ಪರ ವಕೀಲರು, ತನಿಖೆಯ ಕುರಿತು ಸಂಶಯ ವ್ಯಕ್ತಪಡಿಸಿ, ಕೇಸ್ ಡೈರಿಯನ್ನು ತರಿಸಿಕೊಂಡು ನ್ಯಾಯಾಲಯ ಪರಿಶೀಲನೆ ಮಾಡಬೇಕು ಎಂದು ಪೀಠಕ್ಕೆ ಕೋರಿದರು.  