ಬೆಂಗಳೂರು, ಜು. 17: ‘ಕೋವಿಡ್ ಸೋಂಕನ್ನು ನಿಯಂತ್ರಿಸುವಲ್ಲಿ ಆ ವೇಳೆ ಅಧಿಕಾರದಲ್ಲಿದ್ದ (ಬಿಜೆಪಿ) ಸರಕಾರವು ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಔಷಧ, ಯಂತ್ರೋಪಕರಣ ಖರೀದಿ, ಖಾಸಗಿ ಆಸ್ಪತ್ರೆಗಳ ಬಿಲ್ ಪಾವತಿ, ಆಕ್ಸಿಜನ್ ಪೂರೈಕೆ ಸೇರಿದಂತೆ ಇನ್ನಿತರ ವಿಚಾರಗಳ ಸಂಬಂಧ ‘ಪ್ರತಿಷ್ಠಿತ ಸ್ವಾಯತ್ತ ತನಿಖಾ ಸಂಸ್ಥೆಯ ಮೂಲಕ ಹಗರಣದ ಕುರಿತು ಸಮಗ್ರ ತನಿಖೆ ನಡೆಸಬೇಕು’ ಎಂದು ವಿಧಾನ ಮಂಡಲ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಶಿಫಾರಸ್ಸು ಮಾಡಿದೆ.ಸೋಮವಾರ ವಿಧಾನಸಭೆಯಲ್ಲಿ ‘ಕರೋನಾ ನಿಯಂತ್ರಿಸುವಲ್ಲಿ ಆರೋಗ್ಯ ಇಲಾಖೆಯು ಕೈಗೊಂಡ ಕ್ರಮಗಳ ಕುರಿತು ಸಮಿತಿಯ ವಿಶ್ಲೇಷಣಾತ್ಮಕ ವರದಿಯನ್ನು ಮಂಡಿಸಲಾಯಿತು. ‘ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಔಷಧ, ಉಪಕರಣಗಳ ಖರೀದಿ, ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಹಂಚಿಕೆ, ವಿವಿಧ ಇಲಾಖೆಗಳಿಂದ ಭರಿಸಲಾಗಿದ್ದ ವೆಚ್ಚ ಕುರಿತಂತೆ ಪರಿಶೀಲನೆಗೆ ದಾಖಲೆಗಳನ್ನು ಸಲ್ಲಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿ ಸಾಕಷ್ಟು ಕಾಲಾವಕಾಶವನ್ನು ನೀಡಲಾಗಿತ್ತು. ಆದರೂ ಇಲಾಖೆಯು ದಾಖಲೆಗಳನ್ನು ಸಲ್ಲಿಕೆ ಮಾಡಿಲ್ಲ’ ಎಂದು ಉಲ್ಲೇಖಿಸಿದೆ.ಮೇಲ್ಕಂಡ ಅಂಶಗಳನ್ನು ಅವಲೋಕಿಸಿದರೆ ಕೋವಿಡ್ ಸೋಂಕು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಆದ ಕಾರಣ ಸ್ವಾಯತ್ತ ತನಿಖಾ ಸಂಸ್ಥೆಯ ಮೂಲಕ ಹಗರಣದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಸಾರ್ವಜನಿಕ ಲೆಕ್ಕ ಪತ್ರ ಸಮಿತಿ ಒತ್ತಾಯಿಸಿದೆ.‘ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಉಂಟಾದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಏಕವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಿದ್ದು, ವರದಿ ನಿರೀಕ್ಷಿಸಲಾಗಿದೆ ಎಂದು ಇಲಾಖೆಯು ಉತ್ತರ ನೀಡಿದೆ. ಆಯೋಗವು ವರದಿ ನೀಡಿದ ಬಳಿಕ ಅದನ್ನು ಸಮಿತಿಗೆ ನೀಡುವಂತೆ ಸೂಚಿಸಲಾಗಿದೆ.ಕೆಲವು ಖಾಸಗಿ ಆಸ್ಪತ್ರೆಗಳು ಸರಕಾರವು ನಿಗದಿಪಡಿಸಿದ್ದ ದರಕ್ಕಿಂತ ಹೆಚ್ಚು ಲಸಿಕಾ ಸೇವಾ ಶುಲ್ಕವನ್ನು ಸಂಗ್ರಹಿಸುತ್ತಿರುವುದನ್ನು ಸಮಿತಿಯು ಗಮನಿಸಿದೆ. ಆದುದರಿಂದ ಅಧಿಕ ಶುಲ್ಕ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗಳನ್ನು ಪತ್ತೆ ಹಚ್ಚಲು ಇಲಾಖೆಯು ತಂಡಗಳನ್ನು ರಚಿಸಿ, ಅನಿರೀಕ್ಷಿತ ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ.ಕೋವಿಡ್ ಹೊಡೆತಕ್ಕೆ ಸಿಲುಕಿ ತತ್ತರಿಸಿ, ಆಪಾರ ಸಂಖ್ಯೆಯ ಸಾವು-ನೋವುಗಳು ಸಂಭವಿಸಿದರೂ ಜೀವದ ಬೆಲೆಯನ್ನು ಅರ್ಥ ಮಾಡಿಕೊಂಡಿಲ್ಲ. ಒಂದೊಂದು ಜೀವವನ್ನು ಕಳೆದುಕೊಂಡ ಕುಟುಂಬಗಳ ನೋವನ್ನು ಅರಿತುಕೊಳ್ಳದೆ ಅತ್ಯಂತ ಬೇಜವಾಬ್ದಾರಿಯಿಂದ ಮರಣಗಳ ಸಂಖ್ಯೆಯನ್ನು ಕಡಿಮೆ ತೋರಿಸಿ ಇಲಾಖೆಯ ಅಧಿಕಾರಿಗಳು ಅಪರಾಧ ಎಸಗಿರುವುದು ಸಮಿತಿಯು ಗಮನಿಸಿದೆ.ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ ಕೋವಿಡ್ ರೋಗಿಗಳಿಗೆ ಕ್ಯಾನ್ಸರ್, ಅಸ್ತಮ, ಹೃದ್ರೋಗ ಸಂಬಂಧಿತ ಕಾಯಿಲೆಗಳಿದ್ದರೆ, ಕೋವಿಡ್ ಸೋಂಕು ಉಂಟಾಗಿ ಸಾವನ್ನಪ್ಪಿದರೆ ಅಂತಹ ರೋಗಿಗಳು ಕೊವಿಡ್‍ನಿಂದ ಮೃತಪಟ್ಟಿಲ್ಲವೆಂದು ತೀರ್ಮಾನಿಸಬೇಕು ಎಂದು ಉಲ್ಲೇಖಿಸಲಾಗಿದೆ. ಆದುದರಿಂದ ಸಮಿತಿಯು ರಾಜ್ಯದಲ್ಲಾಗಿರುವ ಇಂತಹ ಪ್ರಕರನಗಳನ್ನು ಪತ್ತೆ ಹಚ್ಚಿ, ಮಾನವೀಯ ದೃಷ್ಟಿಯಿಂದ ಮೃತರ ಕುಟುಂಬಗಳಿಗೆ ಪರಿಹಾರ ವಿತರಿಸಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ.ಕಪ್ಪುಶಿಲೀಂಧ್ರ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದರಿಂದ ಪರಿಸ್ಥಿತಿ ನಿಭಾಯಿಸಲು ಮುಕ್ತ ಮಾರುಕಟ್ಟೆಯಲ್ಲಿ ಔಷಧ ಲಭ್ಯವಿಲ್ಲದಿರುವುದನ್ನು ಸಾಬೀತುಪಡಿಸುವ ಯಾವುದೇ ಪೂರಕ ದಾಖಲೆಗಳನ್ನು ಸಮಿತಿಯು ಒತ್ತಾಯಿಸಿದ ನಂತರವು ಇಲಾಖೆಯ ಅಧಿಕಾರಿಗಳು ನೀಡಿರುವುದಿಲ್ಲ. ಕಪ್ಪುಶಿಲಿಂಧ್ರ ಚಿಕಿತ್ಸೆಗೆ ಬಳಸುವ ವಯಲ್ಸ್‍ಗಳನ್ನು ಹೆಚ್ಚು ಮೊತ್ತ ನೀಡಿ ಖರೀದಿಸಿದ್ದರಿಂದ 1.14 ಕೋಟಿ ರೂ.ಅಧಿಕ ವೆಚ್ಚವಾಗಿದೆ. ಈ ಲೋಪಕ್ಕೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಸೂಚನೆ ನೀಡಿದೆ.