ಬೆಂಗಳೂರು: ಬಿಜೆಪಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರೊಳಗೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿದ್ದು, ನಾಯಕರ ವಿರುದ್ಧ ಹೇಳಿಕೆ ನೀಡಿದಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಸೇರಿ ಹಲವರಿಗೆ ಬಿಜೆಪಿ ಶಿಸ್ತುಪಾಲನಾ ಸಮಿತಿಯಿಂದ ಕಾರಣಕೇಳಿ ನೋಟಿಸ್‌ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲೇ ಇಂದು (ಶನಿವಾರ) ರೇಣುಕಾಚಾರ್ಯ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ಡಾಲರ್ಸ್​​ ಕಾಲೋನಿಯಲ್ಲಿರುವ ನಿವಾಸದಲ್ಲಿ  ಭೇಟಿ ಮಾಡಿದ್ದಾರೆ. ನಿನ್ನೆ (ಶುಕ್ರವಾರ) ಬಿಜೆಪಿ ನಾಯಕರರ ಸಭೆಯಲ್ಲಿ ಪಕ್ಷಕ್ಕೆ ಮುಜುಗರ ತರುವಂತೆ ಹೇಳಿಕೆ ನೀಡುವವರನ್ನು ಕರೆದು ಮಾತನಾಡುವ ಜವಾಬ್ದಾರಿಯನ್ನು ಬಿ.ಎಸ್‌.ಯಡಿಯೂರಪ್ಪ ಅವರಿಗೆ ನೀಡುವ ನಿರ್ಣಯವನ್ನು  ಕೈಗೊಂಡಿತ್ತು. ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ನೀಡದಂತೆ ಬಿಎಸ್ ವೈ ಸೂಚನೆ:‘ಪಕ್ಷಕ್ಕೆ ಮುಜುಗರ ಆಗುವ ಹೇಳಿಕೆಗಳನ್ನು ಯಾರೂ ಕೊಡಬಾರದು. ಯಾರು ಆ ರೀತಿ ಮಾತನಾಡಿದ್ದಾರೋ ಅವರ ಜೊತೆ ಚರ್ಚಿಸಿ ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು' ಎಂದು ಮಾಜಿ ಸಿಎಂ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದರು. 