ಬೆಂಗಳೂರು:ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು ಭೇಟಿ ವೇಳೆ ಪವನ್ ಕಲ್ಯಾಣ್ ಅವರು ಆಂಧ್ರದಲ್ಲಿ ಕಾಡಾನೆಗಳ ಸೆರೆ, ಆನೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು, ಮಾವುತರಿಗೆ ತರಬೇತಿಯ ಕುರಿತು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:Paris Olympics 2024: ಅಶಿಸ್ತು ಪ್ರದರ್ಶಿಸಿದ ಕುಸ್ತಿಪಟು ಅಂತಿಮ್ ಪಂಘಲ್​ಗೆ 3 ವರ್ಷ ನಿಷೇಧ!
ನಗರದ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪವನ್ ಕಲ್ಯಾಣ್ ಮಾತುಕತೆ ನಡೆಸಿದರು. ಆ ಬಳಿಕ ವಿಧಾನಸೌಧದಲ್ಲಿ ಅರಣ್ಯ ಸಚಿವರ ಜೊತೆ ಸಭೆ ನಡೆಸಿದರು. ಇದಕ್ಕೂ ಮುನ್ನ ಈಶ್ವರ್ ಖಂಡ್ರೆ ಅವರಿಗೆ ಶಾಲು ಹಾರ ಹಾಕಿ ತಿರುಪತಿ ಲಡ್ಡು ನೀಡಿ ಸನ್ಮಾನಿಸಿ ಗೌರವಿಸಿದರು.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಆಂಧ್ರ ಮತ್ತು ರಾಜ್ಯದ ಅರಣ್ಯಾಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆಂಧ್ರಪ್ರದೇಶದ ಮಾನವ-ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕುಮ್ಕಿ ಆನೆಗಳನ್ನು ನೀಡುವಂತೆ ಕರ್ನಾಟಕಕ್ಕೆ ಮನವಿ ಮಾಡಿದ್ದು, ರಾಜ್ಯದ ಜನರ ಭಾವನೆಗೆ ಚ್ಯುತಿ ಆಗದಂತೆ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೇರೆ ರಾಜ್ಯಗಳಿಗೆ ಆನೆಗಳನ್ನು ನೀಡುವುದು ಸಾಮಾನ್ಯ ಪ್ರಕ್ರಿಯೆ. ಆದರೆ ದಸರಾ ಆನೆಗಳನ್ನು ಯಾವುದೇ ರಾಜ್ಯಕ್ಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಆಂಧ್ರದಲ್ಲಿಯೂ ಕಾಡಾನೆಗಳ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕದಲ್ಲಿ ಆನೆಗಳ ಹಾವಳಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ರೈಲ್ವೆ ಬ್ಯಾರಿಕೇಡ್ ಅಳವಡಿಕೆಯ ಯಶಸ್ಸು, ಕಾಡಾನೆಗಳ ಸೆರೆ ಕಾರ್ಯಾಚರಣೆ, ಆನೆ ಪಳಗಿಸುವುದು ಮತ್ತು ಮಾವುತರ ತರಬೇತಿ ಕುರಿತಂತೆ ಚರ್ಚಿಸಲು ಇಂದು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೊನಿಡಲ ಪವನ್ ಕಲ್ಯಾಣ್ ಅವರು ತಮ್ಮ ರಾಜ್ಯದ ಉನ್ನತ ಅರಣ್ಯಾಧಿಕಾರಿಗಳೊಂದಿಗೆ ಕರ್ನಾಟಕಕ್ಕೆ ಆಗಮಿಸಿದ್ದಾರೆ ಎಂದರು.
ಕರ್ನಾಟಕದಲ್ಲಿ ಆನೆಗಳ ಹಾವಳಿ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ರೈಲ್ವೆ ಬ್ಯಾರಿಕೇಡ್ ಅಳವಡಿಕೆಯ ಯಶಸ್ಸು, ಕಾಡಾನೆಗಳ ಸೆರೆ ಕಾರ್ಯಾಚರಣೆ, ಆನೆ ಪಳಗಿಸುವುದು ಮತ್ತು ಮಾವುತರ ತರಬೇತಿ ಕುರಿತಂತೆ ಚರ್ಚಿಸಲು ಇಂದು ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಗಳು,@JanaSenaPartyಮುಖ್ಯಸ್ಥರಾದ@PawanKalyanಅವರು ತಮ್ಮ ರಾಜ್ಯದ ಉನ್ನತ…pic.twitter.com/fmteZTccfw
— Eshwar Khandre (@eshwar_khandre)August 8, 2024

ಸುಮಾರು ಒಂದು ಗಂಟೆಗಳ ಕಾಲ ಎರಡೂ ರಾಜ್ಯಗಳ ಅರಣ್ಯಾಧಿಕಾರಿಗಳೊಂದಿಗೆ ಉತ್ತಮ ಮತ್ತು ಉಪಯುಕ್ತ, ಫಲಪ್ರದವಾದ ಚರ್ಚೆ ನಡೆದಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಖಂಡ್ರೆ ತಿಳಿಸಿದರು. ರಾಜ್ಯ ಇದೇ 12ರಂದು ವಿಶ್ವ ಆನೆಯ ದಿನದಂದು ಮಾನವ- ಆನೆ ಸಂಘರ್ಷ ನಿರ್ವಹಣೆ ಕುರಿತಂತೆ ಜಿಕೆವಿಕೆಯಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನವನ್ನೇ ಆಯೋಜಿಸಿದೆ. ಈ ಸಮ್ಮೇಳನದಲ್ಲಿ ಉತ್ತಮ ರೂಢಿಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು ಎಂದರು.
ಕರ್ನಾಟಕದಲ್ಲಿ ನಡೆಯುವ ಮೈಸೂರು ದಸರಾ ಮಹೋತ್ಸವದಲ್ಲಿ ಆನೆಗಳೇ ಪ್ರಧಾನ ಆಕರ್ಷಣೆ. ಮೈಸೂರು ದಸರಾದಲ್ಲಿ ವಿಜಯದಶಮಿಯ ದಿನ ನಡೆಯುವ ಜಂಬೂಸವಾರಿ ವಿಶ್ವ ವಿಖ್ಯಾತವಾಗಿದೆ. ಇದಕ್ಕಾಗಿ ಆನೆಗಳನ್ನು ಕಾಡಿನಿಂದ ನಾಡಿಗೆ ತರುವ ಗಜ ಪಯಣ ಶಾಸ್ತ್ರೋಕ್ತವಾಗಿ ನಡೆಯುತ್ತದೆ. ಇದೇ ಆಗಸ್ಟ್ 21ರಂದು ವೀರನಹೊಸಹಳ್ಳಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಆನೆ ಕಾರ್ಯಾಚರಣೆ ಅಪಾಯಕಾರಿ: ಹಿಂದೆ ಆನೆ ಹಿಡಿಯಲು ಖೆಡ್ಡಾ ತೋಡಲಾಗುತ್ತಿತ್ತು. ಈಗ ಅರೆವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗುತ್ತದೆ. ಇದು ಕೂಡ ಅತ್ಯಂತ ಅಪಾಯಕಾರಿ. ಆನೆ ಕಾರ್ಯಾಚರಣೆ ವೇಳೆ ಆಪಾಯವೂ ಇರುತ್ತದೆ. ಕರ್ನಾಟಕದ ಹೆಸರಾಂತ ಶಾರ್ಪ್ ಶೂಟರ್ ವೆಂಕಟೇಶ್ ಆನೆಗೆ ಅರವಳಿಕೆ ಚುಚ್ಚುಮದ್ದು ನೀಡುವಾಗ ಭೀಮ ಆನೆಗೆ ಬಲಿಯಾಗಿದ್ದು ನಿಮಗೆಲ್ಲಾ ತಿಳಿದಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು. ಆನೆ ಸೇರೆ ಹಿಡಿಯುವ ಕೌಶಲ್ಯ, ಪಳಗಿಸುವ ನೈಪುಣ್ಯತೆ ಕರ್ನಾಟಕದ ಮಾವುತರಲ್ಲಿದೆ. ಹೀಗಾಗಿಯೇ ಭಾರತದ ಇತರ ರಾಜ್ಯಗಳು ಪಳಗಿಸಿದ ಕುಮ್ಕಿ ಆನೆಗಳನ್ನು ನೀಡುವಂತೆ ಬೇಡಿಕೆ ಸಲ್ಲಿಸುತ್ತಿರುತ್ತಾರೆ.
ರಾಜ್ಯದಿಂದ ಹಿಂದೆಯೂ ಆನೆ ನೀಡಿದ್ದೇವೆ:ಈ ಹಿಂದೆ ಕೂಡ ರಾಜ್ಯದಿಂದ ಸಾಕಷ್ಟು ಆನೆಗಳನ್ನು ಇತರ ರಾಜ್ಯಗಳಿಗೆ ಕಳುಹಿಸಲಾಗಿದೆ. 2016-17ರಲ್ಲಿ ಉತ್ತರ ಖಂಡಕ್ಕೆ ಕರ್ನಾಟಕದಿಂದ 11 ಆನೆ ನೀಡಲಾಗಿತ್ತು. ಅದೇ ವರ್ಷ ಛತ್ತೀಸಗಡಕ್ಕೆ 6 ಮತ್ತು ಜಾರ್ಖಂಡ್ ಗೆ 3 ಆನೆ ನೀಡಲಾಗಿತ್ತು. 18-19ರಲ್ಲಿ ಪಶ್ಚಿಮ ಬಂಗಾಳಕ್ಕೆ 8 ಆನೆ, ಬಿಹಾರಕ್ಕೆ 4, ಉತ್ತರ ಪ್ರದೇಶಕ್ಕೆ 12 ಆನೆ ಕಳುಹಿಸಲಾಗಿತ್ತು. 2022-23ರಲ್ಲಿ ಉತ್ತರ ಪ್ರದೇಶಕ್ಕೆ 4, ಮಧ್ಯಪ್ರದೇಶಕ್ಕೆ 14, ಮಹಾರಾಷ್ಟ್ರಕ್ಕೆ 3 ಆನೆ ಕಳುಹಿಸಲಾಗಿತ್ತು. ಅದರಲ್ಲಿ ಒಂದು ಆನೆ ಮಹಾರಾಷ್ಟ್ರದ್ದೇ ಆಗಿದ್ದು, ಇಲ್ಲಿ ಅದಕ್ಕೆ ತರಬೇತಿ ನೀಡಲಾಗಿತ್ತು. ಆನೆಗಳನ್ನು ಇತರ ರಾಜ್ಯಗಳಿಗೆ ನೀಡುವುದು ಒಂದು ಸಾಮಾನ್ಯ ಪ್ರಕ್ರಿಯೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಕೌಶಲ್ಯ ವರ್ಗಾವಣೆ: ಇಂದು ನಾವು ಇತರ ರಾಜ್ಯಗಳಿಗೆ ಪಳಗಿಸಿದ ಆನೆ ನೀಡುವುದರ ಜೊತೆಗೆ ಅಲ್ಲಿನ ಮಾವುತರಿಗೆ, ಕಾವಾಡಿಗರಿಗೆ ಕೌಶಲ್ಯ ವರ್ಗಾವಣೆ ಮಾಡುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಿದ್ದೇವೆ ಎಂದರು.
ಆಂಧ್ರಪ್ರದೇಶವೇ ಇರಲಿ, ಮಹಾರಾಷ್ಟ್ರವೇ ಆಗಿರಲಿ, ಅವರಿಗೆ ನಮ್ಮಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ನಿಮ್ಮ ರಾಜ್ಯದಿಂದ ಪಶುವೈದ್ಯರು, ಮಾವುತರು, ಕಾವಾಡಿಗರು ಮತ್ತು ಅಧಿಕಾರಿಗಳ ತಂಡವನ್ನು ಕಳುಹಿಸಿ ಎಂದು ತಿಳಿಸಲಾಗುತ್ತದೆ. ಅವರು ಆನೆ ಸೆರೆ ಕಾರ್ಯಾಚರಣೆ ಕಣ್ಣಾರೆ ಕಾಣಲು ಇದರಿಂದ ಸಾಧ್ಯವಾಗುತ್ತದೆ. ಬಳಿಕ ಆನೆಗಳನ್ನು ಹಿಡಿದ ಹೇಗೆ ಪಳಗಿಸಲಾಗುತ್ತದೆ ಎಂಬುದನ್ನೂ ಅವರು ಪ್ರತ್ಯಕ್ಷ ನೋಡುತ್ತಾರೆ. ಹೊರ ರಾಜ್ಯದ ಮಾವುತರಿಗೂ ಆ ಆನೆಗಳನ್ನು ಹೇಗೆ ನಿರ್ವಹಿಸಬೇಕು ಎಂದು ತಿಳಿಯುತ್ತದೆ. ಆಗ ಮುಂದಿನ ಕಾರ್ಯಾಚರಣೆಯನ್ನು ಅವರೇ ನಿರ್ವಹಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನಾನು ಇಂದಿನ ಸಭೆಯಲ್ಲಿ ಸಲಹೆ ನೀಡಿದ್ದೇನೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ತಿರುಪತಿ, ಶ್ರೀಶೈಲದಲ್ಲಿ ಸೌಲಭ್ಯಕ್ಕೆ ಮನವಿ:ಆಂಧ್ರಪ್ರದೇಶದ ತಿರುಪತಿ ಮತ್ತು ಶ್ರೀಶೈಲಕ್ಕೆ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಾರೆ. ಅವರಿಗೆ ವಸತಿ ಸೇರಿದಂತೆ ಇತರ ಮೂಲಸೌಕರ್ಯ ಒದಗಿಸಲು ಭೂಮಿ ಮತ್ತಿತರೆ ಸೌಲಬ್ಯಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ಕರ್ನಾಟಕಕ್ಕೂ ಆಂಧ್ರಪ್ರದೇಶಕ್ಕೂ ಮೊದಲಿನಿಂದಲೂ ಅವಿನಾಭಾವ ಸಂಬಂಧವಿದೆ. ಪಂಚ ದ್ರಾವಿಡ ಭಾಷೆಗಳಲ್ಲಿ ಕನ್ನಡ ಮತ್ತು ತೆಲುಗು ಎರಡೂ ಭಾಷೆ ಸೇರುತ್ತವೆ. ನಮ್ಮ ಭಾಷೆ ಬೇರೆ ಆದರೂ ಭಾವನೆಗಳು ಒಂದೇ ಆಗಿದೆ. ಎರಡೂ ಭಾಷೆಯ ಲಿಪಿಗಳ ನಡುವೆ ಸಾಮ್ಯತೆ ಇದೆ. ಎರಡೂ ರಾಜ್ಯಗಳ ಜನರ ನಡುವೆ ಸಮನ್ವಯತೆ, ಸೋದರತ್ವ ಇದೆ ಎಂದರು.
ನನ್ನ ತವರು ಜಿಲ್ಲೆ ಬೀದರ್ ಗಡಿಯಲ್ಲೇ ಅವಿಭಜಿತ ಆಂಧ್ರಪ್ರದೇಶ ಇತ್ತು. ಈಗ ತೆಲಂಗಾಣ ಆಗಿದೆ. ಕಲ್ಯಾಣ ಕರ್ನಾಟಕ ಭಾಗದ ನಮಗೆ ಹೈದ್ರಾಬಾದ್ ಹತ್ತಿರದಲ್ಲೇ ಇದೆ. ಹೈದ್ರಾಬಾದ್ ನಲ್ಲಿ ನಮ್ಮ ಭಾಗದ ಹಲವರು ಉದ್ಯೋಗ – ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಎರಡೂ ರಾಜ್ಯಗಳ ಜೊತೆ ವೈವಾಹಿಕ ಸಂಬಂಧಗಳೂ ಇವೆ. ಇದು ಶತ ಶತಮಾನಗಳಿಂದ ನಡೆಯುತ್ತಿದ್ದು. ಆಂಧ್ರ ಮತ್ತು ಕರ್ನಾಟಕದ ನಡುವೆ ಅವಿನಾಭಾವ ಸಂಬಂಧ ಇದೆ ಎಂದರು.
ನಮ್ಮ ಎರಡೂ ರಾಜ್ಯಗಳ ನಡುವೆ ಬಾಂಧವ್ಯ ಇರಬೇಕು. ನಾವು ಹೊರ ರಾಷ್ಟ್ರಗಳಿಂದ ಕೂಡ ನಮ್ಮ ಮೃಗಾಲಯಗಳಿಗೆ ಪ್ರಾಣಿಗಳನ್ನು ತರಿಸಿಕೊಳ್ಳುತ್ತೇವೆ. ನಮ್ಮಲ್ಲಿ ಹೆಚ್ಚಾಗಿರುವ ಪ್ರಾಣಿಗಳನ್ನು ಇತರ ರಾಷ್ಟ್ರಗಳಿಗೂ ನೀಡುತ್ತೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eleven =
Remember me
