ಬೆಂಗಳೂರು:ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ.
ರಾಜ್ಯದಲ್ಲಿ ಸರ್ಕಾರ ಇದೆ ಎಂಬ ಭಾವನೆಯೇ ಕಾಣುತ್ತಿಲ್ಲವೆಂದು ಬಿಜೆಪಿ ವರಿಷ್ಠರು, ಸಂಘ ಪರಿವಾರದ ಮುಖಂಡರೇ ಆಂತರಿಕವಾಗಿ ವ್ಯಕ್ತಪಡಿಸುತ್ತಿದ್ದ ಅಭಿಪ್ರಾಯಗಳನ್ನು ಬದಲಾಯಿಸುವ ಉದ್ದೇಶದಿಂದ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ.
ಆಡಳಿತ ಪಕ್ಷದ ಶಾಸಕರು ಈ ಬಗ್ಗೆ ಮುಖ್ಯಮಂತ್ರಿ ಮೇಲೆ ಒತ್ತಡ ತರುತ್ತಿದ್ದರು. ಜನರೆದುರು ಚುನಾವಣೆಗೆ ಹೋಗಲು ಅಭಿವೃದ್ಧಿ ಕಾರ್ಯ ಹೆಚ್ಚಾಗಿ ನಡೆಯಬೇಕೆಂಬುದನ್ನು ಪಕ್ಷದ ಗಮನಕ್ಕೂ ತಂದಿದ್ದರು. ಸಂಘ ಪರಿವಾರದ ಮುಖಂಡರು ಸಹ ಈ ನಿಟ್ಟಿನಲ್ಲಿ ಸೂಚನೆ ನೀಡಿದರೆಂದು ಮೂಲಗಳು ಹೇಳಿವೆ.
ಬಜೆಟ್ ಘೋಷಣೆ ಆದೇಶ:ಬಜೆಟ್​ನಲ್ಲಿ ತಾವು ಘೋಷಿಸಿರುವ ಯೋಜನೆಗಳ ಜಾರಿಗೆ ಬೊಮ್ಮಾಯಿ ವಿಶೇಷ ಆಸಕ್ತಿ ತೋರಿಸಿದ್ದಾರೆ. ಈಗಾಗಲೇ 160 ಘೋಷಣೆ ಹೊರಬಿದ್ದಿವೆ. ಇನ್ನೂ 20ಕ್ಕೂ ಹೆಚ್ಚು ಆದೇಶಗಳು ಹೊರಬರಬೇಕಾಗಿದೆ. ಅವುಗಳ ಅನುಷ್ಠಾನಕ್ಕೂ ವೇಗ ನೀಡಲು ಮುಂದಾಗಿದ್ದಾರೆ.
ಚುನಾವಣಾ ವೆಚ್ಚಕ್ಕೆ?:ಸರ್ಕಾರದ ವಿರುದ್ಧ ಪರ್ಸೆಂಟೇಜ್ ಅಕ್ರಮದ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ದೂರು ಪ್ರಧಾನಿ ಕಚೇರಿವರೆಗೂ ತಲುಪಿದೆ. ಚುನಾವಣಾ ವೆಚ್ಚಕ್ಕೂ ಅನುಕೂಲವಾಗಲಿ ಎಂಬ ಉದ್ದೇಶದಿಂದ ಇದೀಗ ದೊಡ್ಡ ಮಟ್ಟದ ಅನುದಾನವನ್ನು ಕ್ಷೇತ್ರಗಳಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂದೂ ರಾಜಕೀಯ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.
ಅವಧಿಪೂರ್ವ ಚುನಾವಣೆ?:ಮುಖ್ಯಮಂತ್ರಿಗಳು ಯಾವಾಗ ಎಲ್ಲ ಕ್ಷೇತ್ರಗಳಿಗೂ ವಿವಿಧ ಇಲಾಖೆಗಳ ಮೂಲಕ ಅನುದಾನ ನೀಡಲು ನಿರ್ಧಾರ ಕೈಗೊಂಡರೋ ರಾಜಕೀಯ ವಲಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯಬಹುದೇ ಎಂಬ ಅನುಮಾನ ಕಾಡಲಾರಂಭಿಸಿದೆ. ಪಕ್ಷದ ಹೈಕಮಾಂಡ್ ಗುಜರಾತ್ ಜತೆಗೆ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಸಬಹುದೇ ಎಂಬ ಪ್ರಶ್ನೆಯೂ ಇದೆ. ಆದರೆ ಬಿಜೆಪಿ ಮೂಲಗಳು ಮಾತ್ರ ಅವಧಿಪೂರ್ವ ಚುನಾವಣೆ ಇಲ್ಲವೇ ಇಲ್ಲ ಎನ್ನುತ್ತಿವೆ.
ಏನಿದೆ ಲೆಕ್ಕಾಚಾರ?:ರಾಜ್ಯಾದ್ಯಂತ ಒಂದು ವರ್ಷ ಅಭಿವೃದ್ಧಿ ಕಾರ್ಯ ನಡೆಯುವಂತಾದರೆ ಪರ್ಸೆಂಟೇಜ್, ನೇಮಕಾತಿ ಸೇರಿದಂತೆ ವಿವಿಧ ಹಗರಣಗಳ ಆರೋಪವನ್ನು ಮರೆತು ಜನ ಪಕ್ಷ ಬೆಂಬಲಿಸುತ್ತಾರೆಂಬ ಭರವಸೆ ಮೇಲೆ ಕ್ಷೇತ್ರವಾರು ದೊಡ್ಡ ಮೊತ್ತದ ಹಣ ಬಿಡುಗಡೆಗೆ ಸಿಎಂ ನಿರ್ಧರಿಸಿದ್ದಾರೆ.
ಪಕ್ಷವಾರು ಮಾಹಿತಿ:ವಿಧಾನಸಭೆ ಒಟ್ಟು ಸದಸ್ಯರ ಸಂಖ್ಯೆ 224. ಅದರಲ್ಲಿ ಬಿಜೆಪಿ 119, ಕಾಂಗ್ರೆಸ್ 69, ಜೆಡಿಎಸ್ 32, ಬಿಎಸ್​ಪಿ 1, ಪಕ್ಷೇತರರು 2 ಹಾಗೂ ಸ್ಪೀಕರ್ ಇದ್ದಾರೆ. ಬಿಜೆಪಿಗೆ ಒಬ್ಬ ಪಕ್ಷೇತರ ಹಾಗೂ ಬಿಎಸ್​ಪಿ ಬೆಂಬಲ ನೀಡುತ್ತಿವೆ. ಸ್ಪೀಕರ್ ಸೇರಿ ಬಿಜೆಪಿಯ ಸಂಖ್ಯೆ 122 ಇದೆ. ಕಾಂಗ್ರೆಸ್​ಗೆ ಒಬ್ಬ ಪಕ್ಷೇತರ ಸೇರಿ 70 ಆಗುತ್ತದೆ. ಆಡಳಿತ ಪಕ್ಷದ ಸದಸ್ಯರ ಸಂಖ್ಯೆ 122 ಆದರೆ, ಪ್ರತಿಪಕ್ಷಗಳ ಸಂಖ್ಯೆ 102. ಬಿಜೆಪಿ ಸದಸ್ಯರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ.ಗಳಂತೆ ಒಟ್ಟಾರೆ 6100 ಕೋಟಿ ರೂ.ಗಳು ಹಾಗೂ ಪ್ರತಿಪಕ್ಷಗಳ ಸದಸ್ಯರ ಕ್ಷೇತ್ರಗಳಿಗೆ ತಲಾ 25 ಕೋಟಿ ರೂ.ಗಳಂತೆ ಒಟ್ಟಾರೆ 2550 ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತದೆ.
ನೀರಾವರಿಗೆ ಒತ್ತು:ಮಹದಾಯಿ ಸೇರಿದಂತೆ ಕೆಲವು ನೀರಾವರಿ ಯೋಜನೆಗಳಿಗೆ ಈ ಸರ್ಕಾರದ ಅವಧಿಯಲ್ಲಿಯೇ ಚಾಲನೆ ನೀಡಬೇಕು, ಕೇಂದ್ರ ಸರ್ಕಾರದ ಎಲ್ಲ ಅನುಮತಿಗಳನ್ನು ಶೀಘ್ರದಲ್ಲಿ ಪಡೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ದೇಶಿಸಿದ್ದಾರೆ. ಅದಕ್ಕೆ ತಕ್ಕಂತೆ ಸಭೆಗಳನ್ನು ನಡೆಸಿದ್ದಾರೆ ಎಂದು ಮೂಲಗಳು ಹೇಳುತ್ತವೆ.
ಹಣ ಬಿಡುಗಡೆ ಹೇಗೆ?:ಬಜೆಟ್​ನಲ್ಲಿ ವಿವಿಧ ಇಲಾಖೆಗಳಿಗೆ ಅನುದಾನ ನೀಡಲಾಗಿದೆ. ಆ ಮೊತ್ತವನ್ನೇ ಕ್ರೋಡೀಕರಿಸಿ ಹಂಚಿಕೆ ಮಾಡಲಾಗುತ್ತದೆ. ಶಾಸಕರು ಸೂಚಿಸಿದ ಕಾಮಗಾರಿ ಕೈಗೊಳ್ಳಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
