ಬೆಂಗಳೂರು:ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯನ್ನು ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯಾತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.
ಕೆ.ಎ.ಎಸ್. ಅಧಿಕಾರಿಗಳ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ರಾಜಕಾರಣಿಗಳು ಕಾನೂನು ಹಾಗೂ ನೀತಿಗಳನ್ನು ನಿರೂಪಿಸಿದರೆ, ಅವುಗಳನ್ನು ಜಾರಿಗೊಳಿಸುವುದು ಅಧಿಕಾರಿಗಳು. ಅಧಿಕಾರಿಗಳು, ಜನರು ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಾರೆ.
ಅಧಿಕಾರಿಗಳು ಪ್ರಾಮಾಣಿಕವಾಗಿ, ಜನಪರವಾಗಿ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಸರ್ಕಾರದ ಅಧಿಕಾರಿ ಹಾಗೂ ನೌಕರರು ಬಡವರ ವಿರೋಧಿ, ಜನವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಬಾರದು. ಜಾತಿ ಧರ್ಮಗಳ ಕಲಹದಲ್ಲಿಯೂ ಇರಬಾರದು. ಧರ್ಮಕ್ಕೂ, ಆಡಳಿತಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.
ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕಾರಣದಲ್ಲಿ ಅಥವಾ ಧರ್ಮ ಕಲಹಗಳಲ್ಲಿ ತೊಡಗಿಕೊಳ್ಳಬಾರದು. ಸಂವಿಧಾನವನ್ನು ರಕ್ಷಿಸಿದರೆ, ಸಂವಿಧಾನ ದೇಶವನ್ನು ರಕ್ಷಿಸುತ್ತದೆ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಒಬ್ಬ ವ್ಯಕ್ತಿ ಒಬ್ಬ ಮತ ಎಂದಿದೆ ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ಈ ಸಮಾನತೆ ಇಲ್ಲ. ಹೀಗೆ ಮುಂದುವರೆದರೆ , ಅಸಮಾನತೆಗೆ ಒಳಗಾದ ಜನರು ಸ್ವಾತಂತ್ರ್ಯಸೌಧವನ್ನು ಧ್ವಂಸಗೊಳಿಸುವ ಸಾಧ್ಯತೆ ಇದೆ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಇದು ಎಲ್ಲ ನಾಗರಿಕರ ಕರ್ತವ್ಯ. ಇದನ್ನು ಅರ್ಥಮಾಡಿಕೊಳ್ಳುವ ಮೂಲಕ ಸಮಾಜದಲ್ಲಿ ಸುಧಾರಣೆ ತರಬಹುದಾಗಿದೆ. ಈಗ ಶಿಕ್ಷಣ ಅಭಿವೃದ್ಧಿಗೊಳ್ಳುತ್ತಿದೆ. ವಿದ್ಯಾವಂತರು ಜಾತ್ಯಾತೀತೆ, ವೈಚಾರಿಕತೆಯನ್ನು ಪಾಲಿಸಬೇಕು.
ಇದನ್ನೂ ಓದಿ:ಮಹಿಳಾ ಪೊಲೀಸರಿಗೆ 300 ಬಾರಿ ಕರೆ ಮಾಡಿ ಕಿರುಕುಳ ನೀಡಿದವನಿಗೆ 3 ವರ್ಷ ಸಜೆ
ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಯನ್ನು ನೀಡಿದೆ. ಈಗಾಗಲೇ 3 ಗ್ಯಾರಂಟಿ ಜಾರಿಯಾಗಿವೆ. ಆಗಸ್ಟ್ 24 ರಂದು 4 ನೇ ಗ್ಯಾರಂಟಿ ಹಾಗೂ 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿ 2024 ರಲ್ಲಿ ಜಾರಿಯಾಗುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಯಶಸ್ಸು ಅಧಿಕಾರಿಗಳ ಮೇಲೆ ಅವಲಂಬಿತವಾಗಿದೆ. ಸ್ವಾತಂತ್ರ್ಯ ಭಾರತದ ಫಲವನ್ನು ಜನರಿಗೆ ತಲುಪಿಸುವ ಮೂಲಕ ಸಾಮಾಜಿಕ ಸುಧಾರಣೆಯನ್ನು ತರಬಹುದಾಗಿದೆ.
ಇದೇ ದಿನ ಮಹಾತ್ಮಾ ಗಾಂಧಿಯವರು ಬ್ರಿಟೀಷರಿಗೆ ಅಂತಿಮ ಕರೆ ನೀಡಿದ ಕ್ವಿಟ್ ಇಂಡಿಯಾ ದಿನವನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಮಾಜಕ್ಕೆ ತಮ್ಮನ್ನು ತಾವು ಅರ್ಪಿಸಿಕೊಳ್ಳಬೇಕೆಂದು ಸಂಕಲ್ಪ ಮಾಡಬೇಕಾದ ದಿನ. ಅಧಿಕಾರಿಗಳಾಗಲಿ, ಜನರಾಗಲಿ, ಸಮಾಜ ನನಗೇನು ಮಾಡಿತು ಎನ್ನುವ ಬದಲು ಸಮಾಜಕ್ಕೆ ನನ್ನ ಕೊಡುಗೆ ಏನು ಎಂಬುದನ್ನು ಅರಿತುಕೊಳ್ಳಬೇಕು. ಸಮಾಜವನ್ನು ಬದಲಾವಣೆ , ಸುಧಾರಣೆ , ಸಮಾನತೆಯ ಸಮಾಜ ನಿರ್ಮಾಣದ ಜವಾಬ್ದಾರಿ ನಮ್ಮ ಮೇಲಿದೆ. ಇದೇ ತತ್ವವನ್ನು ಬಸವ, ಬುದ್ಧ, ಗಾಂಧೀಜಿ, ಅಂಬೇಡ್ಕರ್ , ಕುವೆಂಪು, ನಾರಾಯಣಗುರು ಸೇರಿದಂತೆ ಹಲವು ದಾರ್ಶನಿಕರು ಬೋಧಿಸಿದ್ದಾರೆ.
1919 ರಲ್ಲಿ ಸಂಘ ಅಸ್ತಿತ್ವ ಬಂದಿದ್ದು , ಇದಕ್ಕೆ ಸ್ಪೂರ್ತಿ ಒಬ್ಬ ಐರ್ ಲೆಂಡ್ ಅಧಿಕಾರಿ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಡಳಿತಾವಧಿಯನ್ನು ಸುವರ್ಣ ಯುಗ ಎನ್ನಲಾಗುತ್ತದೆ. ಅವರ ಕಾಲದಲ್ಲಿ ಆದಂತಹ ಅಭಿವೃದ್ಧಿ , ಸಾಮಾಜಿಕ ಕಾರ್ಯಗಳು, ಉದ್ದಿಮೆಗಳು ದೊಡ್ಡಮಟ್ಟದಲ್ಲಿ ಆಗಿತ್ತು. ಇದೇ ಅವಧಿಯಲ್ಲಿ ನಾಗರಿಕ ಸೇವೆ ಎಂಬ ಕಲ್ಪನೆಗೆ ಜೀವ ಬಂದಿತು. 1973 ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕಾರಣವಾಯಿತು. ಮೊದಲು ಮೈಸೂರು ಆಡಳಿತ ಸೇವೆ ಎಂದಿದ್ದು, ನಂತರ ಕರ್ನಾಟಕ ಆಡಳಿತ ಸೇವೆ ಎಂದು ಹೆಸರಿಸಲಾಯಿತು. ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ತನ್ನ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಮಾರಂಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಇ.ವಿ. ರಮಣರೆಡ್ಡಿ, ಕೆ.ಎ.ಎಸ್. ಅಧಿಕಾರಿಗಳ ಸಂಘದ ಅಧ್ಯಕ್ಷ ರವಿ ತಿರ್ಲಾಪೂರ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
