ಬೆಂಗಳೂರು:ಕನ್ನಡಿಗರಿಗೆ ಉದ್ಯೋಗ ಕೊಡುವ  ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ?  ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಎಂದು ಪ್ರಶ್ನಿಸಿ, ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ವಿಜಯೇಂದ್ರ ಅಭಿಪ್ರಾಯ ಹಂಚಿಕೊಂಡಿದ್ದಾರೆ.
‘ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ’ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು  ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ? ಎಂದು ವ್ಯಂಗ್ಯವಾಗಿ ಕೇಳಿದ್ದಾರೆ.
ಮುಖ್ಯಮಂತ್ರಿಗಳು ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್  ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು  ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ ಎಂದು ಕಿಡಿಕಾರಿದ್ದಾರೆ.
ಐಎನ್ ಡಿಐಎ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ?
ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.
ವಿಧೇಯಕದ ಕುರಿತು ಮಾಧ್ಯಮಗಳಲ್ಲಿಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ.
ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ  ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ ಎಂದು ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 8 =
Remember me
