ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು ಡಿಸಿ-ಸಿಇಒ-ಎಸ್ಪಿಗಳು ಕ್ರಿಯಾಶೀಲತೆ ಹಾಗೂ ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಪಾಠ ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಡಿಸಿ-ಸಿಇಒಗಳು ತಮ್ಮ ಜಿಲ್ಲೆಯ ಸಮಗ್ರ ಮಾಹಿತಿ ಅಂಗೈಯಲ್ಲಿ ಇಟ್ಟುಕೊಂಡು ಉತ್ಸಾಹದಿಂದ ಕೆಲಸ ಮಾಡಬೇಕು. ಆಗ ಮಾತ್ರ ಪ್ರಗತಿ ಮತ್ತು ಅಭಿವೃದ್ಧಿಯ ವೇಗ ಕಾಣಲು ಸಾಧ್ಯ. ಕರ್ನಾಟಕ ಗುಡ್ ಗೌರ್ನೆನ್ಸ್ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮಗಳ ಮೇಲಿದೆ ಎಂದು ಹೇಳಿದರು.
ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎಂದ ಸಿಎಂ, ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಒದಗಿಸುವಲ್ಲಿ ವಿಳಂಬ ಸಲ್ಲದು. ಕಾನೂನು ಪ್ರಕಾರ ಪರಿಶೀಲಿಸಿ 1003 ಅರ್ಹ ಪ್ರಕರಣಗಳಲ್ಲಿ 994 ರೈತರ ಕುಟುಂಬಕ್ಕೆ ಪರಿಹಾರ ಒದಗಿಸಲಾಗಿದೆ. ಹಾಗೆಯೇ, ರೈತರ ಸಭೆ ಮಾಡಿ ಜಾಗೃತಿ, ಅವರಲ್ಲಿ ಆತ್ಮವಿಶ್ವಾಸ ಮೂಡಿಸುವ ಕಾರ್ಯ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯ ಚುರುಕುಗೊಳಿಸಬೇಕು. ರಾಜ್ಯದಲ್ಲಿ 84,52,317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ಸಿಎಂ ಸಭೆಯಲ್ಲಿ ತಿಳಿಸಿದರು.
ಈಗಾಗಲೆ ಅನುಮತಿ ನೀಡಲಾಗಿರುವ ಹೊಸ ಇಂದಿರಾ ಕ್ಯಾಂಟೀನ್​ಗಳ ನಿರ್ವಣಕ್ಕೆ ಆದಷ್ಟು ಬೇಗನೆ ಜಾಗ ಗುರುತಿಸಬೇಕು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 70 ಸ್ಥಳಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್ ನಿರ್ವಿುಸಲು ಅನುಮೋದನೆ ನೀಡಲಾಗಿದ್ದು, ಆದಷ್ಟು ಬೇಗನೆ ಸ್ಥಳ ಗುರುತಿಸಬೇಕು. ಹೊಸ ಮೆನು ಟೆಂಡರ್ ಪ್ರಕ್ರಿಯೆಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು ಎಂದು ಹೇಳಿದರು.
1. ಆಸ್ತಿ ತೆರಿಗೆ ವಸೂಲಿಮಾಡಿ:ಆಸ್ತಿ ತೆರಿಗೆ ಹಳೇ ಬಾಕಿ ಸಂಪೂರ್ಣವಾಗಿ ವಸೂಲು ಮಾಡಬೇಕು. ಪ್ರಸ್ತುತ ವರ್ಷದ ಜೂನ್ ಅಂತ್ಯದವರೆಗೆ 1053 ಕೋಟಿ ರೂ. ವಸೂಲಾತಿಗೆ ಬಾಕಿಯಿದೆ. ಅಭಿಯಾನದ ರೀತಿಯಲ್ಲಿ ಆಸ್ತಿ ತೆರಿಗೆ ವಸೂಲಾತಿಯನ್ನು ಕೈಗೊಳ್ಳಬೇಕು ಮತ್ತು ಹಾಗೆಯೇ, ಜಮೀನು ಮಾರ್ಗಸೂಚಿ ದರಕ್ಕಿಂತ ಕಡಿಮೆ ಬೆಲೆಗೆ ನೊಂದಣಿ ಅಗುತ್ತಿರುವ ಪ್ರಕರಣಗಳು ಕಂಡು ಬಂದಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಇಂತಹ 24,519 ಪ್ರಕರಣಗಳು ಬಾಕಿಯಿದ್ದು, 310 ಕೋಟಿ ರೂ. ರಾಜಸ್ವ ವಸೂಲಾತಿ ಮಾಡಬೇಕಾಗಿದೆ. ಇದನ್ನು ತ್ವರಿತವಾಗಿ ಮಾಡಿ ಎಂದು ತಾಕೀತು ಮಾಡಿದರು.
2. ಫಲಿತಾಂಶ ಹೆಚ್ಚಿಸಿ:ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಸಿಎಂ, ಕಳೆದ ವರ್ಷಕ್ಕಿಂತ ಶೇ.10 ಕಡಿಮೆಯಾಗಿದೆ. ಪರೀಕ್ಷಾ ಅಕ್ರಮಗಳನ್ನು ನಿಯಂತ್ರಣದಲ್ಲಿಟ್ಟಿರುವುದೇ ಒಂದು ಕಾರಣವಾಗಲು ಸಾಧ್ಯವಿಲ್ಲ. ಇನ್ನು ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು, ಸಿಇಒಗಳು, ಶಿಕ್ಷಣ ಇಲಾಖೆಯ ಹಿರಿ ಅಧಿಕಾರಿಗಳದ್ದೂ ಜವಾಬ್ದಾರಿ ಇದೆ. ಒಟ್ಟಿಗೆ ಕುಳಿತು ಚರ್ಚೆ ಮಾಡಿ ಫಲಿತಾಂಶ ಹೆಚ್ಚಿಸಲು ಪ್ರಯತ್ನಿಸಬೇಕು ಎಂದು ಗುರಿ ನೀಡಿದರು.
3. ಜನರ ಸಂಪರ್ಕದಲ್ಲಿರಿ:ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಪಿಡಿಒ, ವಿಐ ಸೇರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. ಮುಂದೆ ಸೂಚನೆ ಪಾಲಿಸಿ ಎಂದು ತಿಳಿಸಿದರು. ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ಅಧಿಕಾರಿಗಳು ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ ಎಂದು ಪ್ರಶ್ನಿಸಿದರು. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಮಾಡಿ ಎಂದರು.
4. ವಿಲೇವಾರಿ ಚುರುಕಾಗಲಿ:ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣ ಬಾಕಿ ಇವೆ. ಎಸಿಕೋರ್ಟ್​ನಲ್ಲಿ ಪ್ರಕರಣ 37587 ಬಾಕಿ ಇವೆ. ಡಿಸಿಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. ಕೆಲವು ಡಿಸಿಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ ಡಿಸಿ ಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು. ಕೂಡಲೇ ಕಡತ ವಿಲೇವಾರಿಗೆ ಆದ್ಯತೆ ನೀಡಿ, ಪ್ರಕರಣಗಳನ್ನು ಇತ್ಯರ್ಥಪಡಿಸಿ ಎಂದು ಹೇಳಿದರು.
6. ಹಾಸ್ಟೆಲ್ ತೊಡಕು ನಿವಾರಿಸಿ:131,21,302 ಮೆಟ್ರಿಕ್ ಪೂರ್ವ ಮಕ್ಕಳಿಗೆ ಮೊದಲ ಬಾರಿಗೆ ಪ್ರಥಮ ತ್ರೖೆಮಾಸಿಕ ಅವಧಿಯಲ್ಲಿಯೇ ವಿದ್ಯಾರ್ಥಿ ವೇತನ ನೀಡಲಾಗಿದ್ದು, 95436 ವಿದ್ಯಾರ್ಥಿಗಳ ಆಧಾರ್ ಸೀಡ್ ಮಾಡಬೇಕಾಗಿದೆ. ಇದನ್ನು ಶೀಘ್ರವೇ ಪೂರ್ಣಗೊಳಿಸಲು ಸೂಚಿಸಲಾಯಿತು. ಹಾಸ್ಟೆಲ್ ಪ್ರವೇಶ ಪ್ರಕ್ರಿಯೆಯನ್ನು ಆನ್​ಲೈನ್ ಮೂಲಕವೇ ಕೈಗೊಳ್ಳಬೇಕು. ತಾಂತ್ರಿಕ ತೊಡಕುಗಳಿದ್ದರೆ ನಿವಾರಿಸಿ, 10 ದಿನಗಳ ಒಳಗೆ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಬೇಕೆಂದು ಸಿಎಂ ತಿಳಿಸಿದರು.
8. ಯೋಜನೆಗೆ ಜಮೀನು ಗುರುತಿಸಿ: ವಿವಿಧ ಇಲಾಖೆಗಳಿಗೆ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಭೂಮಿ ಪಡೆಯಲು ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ತಿಂಗಳ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ತಮ್ಮ ಅಗತ್ಯತೆ ವಿವರಿಸುವಂತೆ ಸಿಎಂ ಸೂಚಿಸಿದರು. ಇಂಧನ ಇಲಾಖೆಯಲ್ಲಿ ಒಟ್ಟು 217 ಪ್ರಕರಣಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಜಮೀನು ಅಗತ್ಯವಿದ್ದು, ಡಿಸಿಗಳು ಜಮೀನು ಗುರುತಿಸಿ ಹಸ್ತಾಂತರಿಸಬೇಕು. ಪಿಎಂ ಕುಸುಮ್ ಸೌರಘಟಕ ಯೋಜನೆಯಡಿ 170 ಕಾಮಗಾರಿಗಳಿಗೆ ಜಮೀನು ಒದಗಿಸಬೇಕಾಗಿದೆ ಎಂದರು.
10. ಅರಣ್ಯ ಸಮಸ್ಯೆ ಪರಿಹರಿಸಿ:ಯಾವುದೇ ಜಮೀನನ್ನು ತಪ್ಪಾಗಿ ಡೀಮ್್ಡ ಅರಣ್ಯ ಪಟ್ಟಿಗೆ ಸೇರಿಸಿದ್ದರೆ, ಅಂತದ್ದನ್ನು ಗುರುತಿಸಲು ಕಂದಾಯ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ತಿಂಗಳ ಒಳಗಾಗಿ ಜಂಟಿ ಸಮೀಕ್ಷೆ ನಡೆಸಿ ಅದನ್ನು ಸಂಪುಟದ ಮುಂದೆ ಮಂಡಿಸುವಂತೆ ಸಿಎಂ ತಿಳಿಸಿದರು. ಹಾಗೆಯೇ, ಅಕ್ರಮ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಕುರಿತು ಹಲವಾರು ದೂರುಗಳು ಬರುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಗಣಿಗಾರಿಕೆ ಮಾಡುವ ಮರಳು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಇನ್ನೂ 270 ಮರಳು ಬ್ಲಾಕ್​ಗಳು ಕಾರ್ಯಾರಂಭ ಮಾಡಬೇಕು ಎಂದು ಹೇಳಿದರು.
5. ಪ್ರಾಣಹಾನಿ ತಪ್ಪಿಸಿ:ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. 27 ಜಿಲ್ಲೆ 177 ತಾಲೂಕುಗಳು, 1247 ಗ್ರಾಮ ಪಂಚಾಯತ್​ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, 20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯತ್ ನಲ್ಲಿ ಟಾಸ್ಕ್ ಪೋರ್ಸ್ ಸಿದ್ಧವಾಗಿರಬೇಕು, ಪ್ರಾಣ ಹಾನಿ ತಪ್ಪಿಸುವುದು ಜಿಲ್ಲಾಡಳಿತದ ಆದ್ಯತೆಯಾಗಬೇಕು ಎಂದು ಸಿಎಂ ಹೇಳಿದರು.
7. ವೈಯಕ್ತಿಕ ಶೌಚಗೃಹ ಕಲ್ಪಿಸಿ:ರಾಜ್ಯದಲ್ಲಿ 4.34 ಲಕ್ಷ ಶೌಚಗೃಹ ಕಟ್ಟುವ ಗುರಿ ಪೈಕಿ 98 ಸಾವಿರ ಶೌಚಗೃಹ ಪೂರ್ಣಗೊಂಡಿವೆ. ಇನ್ನೂ 2.86 ಲಕ್ಷ ಶೌಚಾಗೃಹ ನಿರ್ವಣಕ್ಕೆ ಕಾರ್ಯಾದೇಶ ನೀಡಬೇಕಾಗಿದ್ದು, ನಿರ್ವಣಕ್ಕಾಗಿ ಬೇಕಾಗುವ ಹೆಚ್ಚುವರಿ ಮೊತ್ತವನ್ನು ನರೇಗಾ ಅಡಿ ಬಳಸಿಕೊಳ್ಳುವ ಕುರಿತು ಪರಿಶೀಲಿಸಬೇಕೆಂದರು. ಫ್ರೀ ಫ್ಯಾಬ್ರಿಕೇಟೆಡ್ ಶೌಚಾಗೃಹ ಮಾದರಿ ಅಳವಡಿಸುವ ಕುರಿತು ಸಹ ಪರಿಶೀಲಿಸಿ, ವೈಯಕ್ತಿಕ ಶೌಚಗೃಹಕ್ಕೆ ಸ್ಥಳಾವಕಾಶ ಇಲ್ಲದ ಕಡೆಗಳಲ್ಲಿ ಸಮುದಾಯ ಶೌಚಗೃಹಗಳ ನಿರ್ವಣಕ್ಕೆ ಆದ್ಯತೆ ನೀಡಿ ಎಂದರು.
9. ವಂಚನೆಗೆ ಬ್ರೇಕ್​ಹಾಕಿ:ಕ್ವಾರಿ ಗಣಿ ರಾಯಲ್ಟಿಯಲ್ಲಿ ಸರ್ಕಾರಕ್ಕೆ ನಷ್ಟ ಆಗುತ್ತಿದೆ ಎನ್ನುವ ದೂರಿನ ಬಗ್ಗೆ ಗರಂ ಆದ ಮುಖ್ಯಮಂತ್ರಿಗಳು ಈ ಬಗ್ಗೆ ಕಠಿಣ ಕ್ರಮ ಕೈಗೊಂಡು ನಷ್ಟ ತಡೆಯುವಂತೆ ತಾಕೀತು ಮಾಡಿದರು. ಪರ್ವಿುಟ್ ಪಡೆಯದೆ ರಾಯಲ್ಟಿ ಸಂಗ್ರಹದಲ್ಲಿ ಸರ್ಕಾರಕ್ಕೆ ಆಗುತ್ತಿರುವ ನಷ್ಟದ ಬಗ್ಗೆ ವಿವಿಧ ಸಚಿವರು ಗಮನ ಸೆಳೆದಾಗ ಸಿಎಂ ಈ ಸೂಚನೆ ನೀಡಿದರು. ಈ ಬಗ್ಗೆ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ ಸಿಎಂ ಇದನ್ನೆಲ್ಲ ತಕ್ಷಣ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹಾಗೆಯೇ, ಈ ಬಗ್ಗೆ ಅಗತ್ಯವಿದ್ದರೆ ಸರ್ಕಾರದಿಂದ ಹೊಸ ನೀತಿಯನ್ನೇ ರೂಪಿಸೋಣ ಎಂದರು.
ಅನರ್ಹರಿಗೆ ನೀಡಿರುವ ಬಿಪಿಎಲ್ ಕಾರ್ಡ್ ರದ್ದುಗೊಳ್ಳುವ ಕಾಲ ಸಮೀಪಿಸಿದೆ. ಐಷಾರಾಮಿ ಮನೆ, ಕಾರು, ಎಕರೆಗಟ್ಟಲೆ ಭೂ ಒಡೆತನ ಹೊಂದಿದ್ದರೂ ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿರುವವರನ್ನು ಪತ್ತೆ ಹಚ್ಚಿ ಕಾರ್ಡ್ ವಾಪಸ್ ಪಡೆಯುವ ಬಗ್ಗೆ ಹಿಂದೆಲ್ಲ ಚರ್ಚೆಯಾಗಿತ್ತು, ಸೂಚನೆಗಳೂ ಹೊರಟಿದ್ದವು. ರಾಜಕೀಯ ಕಾರಣಗಳಿಗೆ ಆ ಪ್ರಯತ್ನ ನೆನೆಗುದಿಗೆ ಬಿದ್ದಿತ್ತು. ಇದೀಗ ಪುನಃ ಅಂತದ್ದೊಂದು ಸಾಹಸಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕಿದ್ದಾರೆ. ವಿಧಾನ ಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸಂಗತಿ ಪ್ರಸ್ತಾಪಿಸಿರುವ ಅವರು, ರಾಜ್ಯದಲ್ಲಿ ಶೇ.80 ಮಂದಿ ಬಿಪಿಎಲ್ ಕಾರ್ಡ ಹೊಂದಿದ್ದಾರೆ. ಅದೇ ತಮಿಳುನಾಡಿನಲ್ಲಿ ಈ ಪ್ರಮಾಣ ಶೇ.40 ಇದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ ಎಂದು ಸಿಎಂ ಹೇಳಿಕೊಂಡಿದ್ದಾರೆ. ಜತೆಗೆ, ಅನರ್ಹ ಬಿಪಿಎಲ್ ಕಾರ್ಡಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ ಒದಗಿಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಇನ್ನು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 3784 ಅರ್ಜಿಗಳು ಇತ್ಯರ್ಥಪಡಿಸಲು ಬಾಕಿಯಿದ್ದು ಸಕಾಲದ ಅವಧಿಯ ಮಿತಿಯಲ್ಲಿಯೇ ಇವೆ. ಇನ್ನು ಮುಂದೆ 30 ದಿನಗಳ ಒಳಗಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.ರಾಜ್ಯದಲ್ಲಿ 76 ಲಕ್ಷ ಜನರಿಗೆ ಪಿಂಚಣಿ ನೀಡುತ್ತಿದ್ದು, ದೇಶದಲ್ಲೇ ಅಧಿಕವಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎನ್​ಪಿಸಿಐ ಮ್ಯಾಪಿಂಗ್ ಮಾಡುವಲ್ಲಿ 2 ಲಕ್ಷ ಪ್ರಕರಣಗಳು ಬಾಕಿಯಿವೆ. ಇದನ್ನು ಆದ್ಯತೆ ಮೇರೆಗೆ ಮಾಡಲು ನಿರ್ದೇಶನ ನೀಡಿದರು.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸತತ 9 ಗಂಟೆಗಳ ಕಾಲ ಜಿಲ್ಲಾಡಳಿತಗಳ ಮುಖ್ಯಸ್ಥರ ಸಭೆ ನಡೆಸುವ ಮೂಲಕ ಆಡಳಿತ ಯಂತ್ರದ ಮೇಲೆ ಇನ್ನಷ್ಟು ಬಿಗಿ ಸಾಧಿಸುವ ಪ್ರಯತ್ನ ಮಾಡಿದರು. ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಉಸ್ತುವಾರಿ ಅಧಿಕಾರಿಗಳ ಸಭೆಯನ್ನಯ ಬೆಳಗ್ಗೆ 10.30ಕ್ಕೆ ಪ್ರಾರಂಭಿಸಿದ ಸಿಎಂ, ಮಧ್ಯಾಹ್ನ 2.20 ತನಕ ನಡೆಸಿದರು. 40 ನಿಮಿಷ ಊಟದ ವಿರಾಮದ ಬಳಿಕ ಮತ್ತೆ 3 ಗಂಟೆಗೆ ಸಭೆ ಪ್ರಾರಂಭಿಸಿ, ರಾತ್ರಿ 8.15ಕ್ಕೆ ಕೊನೆಗೊಳಿಸಿದರು. ಮಳೆಗಾಲದ ಅಧಿವೇಶನ ಜು.15ರಂದು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ವಿರೋಧ ಪಕ್ಷವನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಜ್ಜಾಗಲು ಈ ಸಭೆ ಮಹತ್ವದ್ದಾಗಿದೆ.
ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು, ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ. ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎಂದು ಸ್ಪಷ್ಟ ಸೂಚನೆ ನೀಡಿದರು. ಅದೇ ರೀತಿ ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು ಎಂದು ನಿರ್ದೇಶನ ನೀಡಿದರು. ಬುಡಕಟ್ಟು ಜನರಿಗೆ ಅರಣ್ಯ ಜಮೀನು ಮಂಜೂರು ಮಾಡಲು 26,126 ಅರ್ಜಿಗಳು ಬಾಕಿ ಇವೆ. ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕೆಂದ ಸಿಎಂ, ಪಿಂಚಣಿ ಅರ್ಜಿಗಳು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಬಾಕಿ ಇವೆ ಎನ್ನುವ ಪಟ್ಟಿ ಪ್ರಸ್ತಾಪಿಸಿದ ಸಿಎಂ ಆಯಾ ಜಿಲ್ಲಾಧಿಕಾರಿಗಳಿಗೆ ಕಾಲಮಿತಿಯೊಳಗೆ ಇತ್ಯರ್ಥ ಮಾಡಬೇಕೆಂದರು.
ಕಾಲೇಜು ಯುವತಿಯರಿಗೆ ಮರ್ಮಾಂಗ ತೋರಿಸಿ ಪರಾರಿಯಾಗಿದ್ದವನ ಹಡೆಮುರಿ ಕಟ್ಟಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 17 =
Remember me
