ಬೆಂಗಳೂರು:ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಹಾಗೂ ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ  ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು.
ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು ಎಂದು ಸ್ಮರಿಸಿದರು.
ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ.
ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ.  ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ.
ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ. ಬಸವಾದಿ ಶರಣಗರು 800 ವರ್ಷಗಳ ಹಿಂದಯೇ ಸಮಾನತೆಗಾಗಿ ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಆದರೆ ಸಂಪೂರ್ಣ ಸಮ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರತಿಯೊಬ್ಬರಿಗೂ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕದರೆ ಮಾತ್ರ ಜಾತಿ ವ್ಯವಸ್ಥೆ ಹೋಗಬಹುದು. ಇದಕ್ಕಾಗಿಯೇ ಅರಸು ಅವರು ದಲಿತರು, ಮಹಿಳೆಯರು, ರೈತರು, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು ನೀಡಿದರು. ಮಲ ಹೊರುವ ಪದ್ಧತಿ ಸೇರಿದಂತೆ ಅನೇಕ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದರು.
ಎಲ್ಲರಿಗೂ ಸಮಾನ ಅವಕಾಶ ಸಿಗಲು ಹಾವನೂರು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ರಚನೆ ಮಾಡಿ, ಎಷ್ಟೇ ವಿರೋಧ ಇದ್ದರೂ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿದರು. ಇದರಿಂದ ಹಿಂದುಳಿದ ವರ್ಗದವರಿಗೆ ಶಿಕ್ಷಣದಲ್ಲಿ  ಮೀಸಲಾತಿ ಸಾಧ್ಯವಾಯಿತು ಎಂದರು.
ತಳ ಸಮುದಾಯದವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲಗೊಳಿಸಲು ಎಷ್ಟೇ ವಿರೋಧ ಇದ್ದರೂ, ಜಾರಿಗೊಳಿಸಿದರು. ಹಿಂದುಳಿದವರಿಗೆ ಶೇ.38 ರಷ್ಟು ಮೀಸಲಾತಿ ಸಿಕ್ಕಿದ್ದರೆ ಅದಕ್ಕೆ ಅರಸು ಅವರೇ ಕಾರಣ ಎಂದು ಹೇಳಿದರು.
ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದಾರೆ.
ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಾವು ಜಾತಿ ಗಣತಿ ಮಾಡಿದ್ದೇವೆ. ಜಾತಿ ಗಣತಿ ಮಾಡದೆ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯ ಒದಗಿಸಲು ನಾವು ನಡೆಸುತ್ತಿರುವ ಪ್ರಯತ್ನಗಳಿಂದ ಹತಾಶರಾಗಿ ನನ್ನನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ಮಾಡುತ್ತಿದಾರೆ.
ನಾನು 1984ರಲ್ಲಿ ಮೊದಲ ಬಾರಿಗೆ ಮಂತ್ರಿಯಾದ ಬಳಿಕ ಕಳೆದ  40 ವರ್ಷಗಳಲ್ಲಿ ಇಂದಿನವರೆಗೆ ನನ್ನ ಜೀವನದಲ್ಲಿ ಯಾವುದೇ  ಕಳಂಕವಿಲ್ಲ. ನಾನು ಯಾವುದೇ ತಪ್ಪು ಮಾಡದಿದ್ದರೂ ಈಗ ಕಪ್ಪು ಮಸಿ ಬಳಿಯಲು ನಿರಂತರ ಪ್ರಯತ್ನ ನಡೆಯುತ್ತಿದೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ, ಸಾಮಾಜಿಕ ನ್ಯಾಯದ ವಿಷಯದಲ್ಲಿ, ನಂಬಿರುವ ಸಿದ್ಧಾಂತಗಳ ಕುರಿತು ಯಾವತ್ತೂ ರಾಜಿ ಮಾಡುವುದಿಲ್ಲ.
ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಖರ್ಚು ಮಾಡಲು ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಗೆ ತಿದ್ದುಪಡಿ ತಂದದ್ದು ನಮ್ಮ ಸರ್ಕಾರ. ಕೇಂದ್ರದಲ್ಲಿ ಈ ರೀತಿಯ ಕಾಯ್ದೆಯನ್ನು ಜಾರಿಗೆ ತರದೇ ಇಲ್ಲಿ ಅನುಷ್ಠಾನದ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಈ ರೀತಿ ಟೀಕಿಸಲು ಅವರಿಗೆ ಯಾವುದೇ ನೈತಿಕ ಹಕ್ಕು ಇಲ್ಲವೆಂದು ತಿರುಗೇಟು ನೀಡಿದರು.
ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + seven =
Remember me
