ಮೈಸೂರು:ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ‘ಗೃಹಲಕ್ಷ್ಮಿ’ ಯೋಜನೆಗೆ ಅರಮನೆ ನಗರಿಯಲ್ಲಿ ಇನ್ನೂ ಕೆಲವೇ ಗಂಟೆಗಳಲ್ಲಿ ಚಾಲನೆ ಸಿಗಲಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್​ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಲಕ್ಷಾಂತರ ಮಹಿಳೆಯರ ನಡುವೆ ಗೃಹಲಕ್ಷ್ಮೀ ಯೋಜನೆಗೆ ಅದ್ಧೂರಿ ಚಾಲನೆ ಸಿಗಲಿದೆ. ಈ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮ ರಾಜ್ಯಾದ್ಯಂತ 6 ಸಾವಿರಕ್ಕೂ ಹೆಚ್ಚು ಗ್ರಾಪಂ, ಬಿಬಿಎಂಪಿ 198 ವಾರ್ಡ್​ಗಳಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗಲಿದೆ. ಈ ಮೇಲಿನ ಯೂಟ್ಯೂಬ್​ ಲಿಂಕ್​ ಮೂಲಕ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಸಮಾರಂಭವನ್ನು ವೀಕ್ಷಣೆ ಮಾಡಬಹುದಾಗಿದೆ.
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯು ಮನೆ ಯಜಮಾನಿಗೆ ಉಚಿತ ಹಣ ನೀಡುವ ಯೋಜನೆಯಾಗಿದೆ. ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬರೋ ಮುನ್ನ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈ ಯೋಜನೆ ಅಡಿಯಲ್ಲಿ ಪ್ರತಿ ಮನೆಯ ಯಜಮಾನಿಗೆ 2000 ರೂ. ನೀಡಲಾಗುತ್ತದೆ. ಒಂದೇ ಮನೆಯಲ್ಲಿ ಅತ್ತೆ-ಸೊಸೆ ಇದ್ದಲ್ಲೆ, ಮನೆಯ ಯಜಮಾನಿ ಯಾರು ಎಂಬುದನ್ನು ಅವರೇ ತೀರ್ಮಾನ ಮಾಡಿಕೊಳ್ಳಬೇಕು. ಈಗಾಗಲೇ 1.28 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಇಂದು ಎಲ್ಲರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ.
ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಈಗಾಗಲೇ ಯುವಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಗಳಿಗೆ ಅದ್ಧೂರಿ ಚಾಲನೆ ದೊರೆತಿದೆ. ಇಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ. ಉಳಿದ ಯುವನಿಧಿ ಯೋಜನೆ ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ.
ಗೃಹಲಕ್ಷ್ಮಿಯರಿಗೆ ಧನಲಕ್ಷ್ಮಿ: ಸಿಎಂ ಸಿದ್ದರಾಮಯ್ಯ ತವರಲ್ಲಿ ಇಂದು ಅದ್ದೂರಿ ಚಾಲನೆ; 1.28 ಕೋಟಿ ಮಹಿಳೆಯರಿಂದ ಯೋಜನೆಗೆ ನೋಂದಣಿ

Sign in to your account
Please enter an answer in digits:4 + 10 =
Remember me
