ಬೆಂಗಳೂರು: ತನ್ನನ್ನು ಬಿಜೆಪಿ ಬಿ ಟೀಮ್ ಎಂದು ಪದೇ ಪದೆ ಮೂದಲಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್ ತೀಕ್ಷ್ಣವಾಗಿ ತಿರುಗೇಟು ನೀಡಿದೆ.ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷವು ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎಂದು ಟೀಕಿಸಿದೆ.ʼಬಾಳೆಗೊಂದು ಏಟು, ಬಾಳಿಗೊಂದು ಮಾತುʼ ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ. ಮೂರ್ಖರಿಗೆ ಎಷ್ಟು ಹೇಳಿದರೂ ಅಷ್ಟೇ, ಅರ್ಥವೇ ಆಗುವುದಿಲ್ಲ ಎಂದಿದೆ ಅಲ್ಲದೆ, ಕಾಮಾಲೆ ಕಾಂಗ್ರೆಸ್‌ ಅನ್ನು ಮೂದಲಿಸಿದೆ.ಮಾಜಿ ಸಿಎಂ ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆಯಲ್ಲಿ ಪಕ್ಷ ವಿಸರ್ಜನೆ ಮಾತು ಹೇಳಿದ್ದು ನಿಜ. “ನನಗೆ ಬಹುಮತದ ಸರಕಾರ ಕೊಟ್ಟರೆ 5 ವರ್ಷದಲ್ಲಿ ಪಂಚರತ್ನಗಳನ್ನು ಜಾರಿ ಮಾಡುವೆ. ಮಾತು ತಪ್ಪಿದರೆ ಮತ್ತೆಂದೂ ಮತ ಕೇಳಲು ಬರುವುದಿಲ್ಲ, ಪಕ್ಷವನ್ನೇ ವಿಸರ್ಜಿಸುತ್ತೇನೆ” ಎಂದಿದ್ದರು. ಈ ಹೇಳಿಕೆಯ ವಿಡಿಯೋ, ಸುದ್ದಿಗಳಿವೆ.. ಗಮನಿಸಬಹುದು ಎಂದು ಜೆಡಿಎಸ್ ಟಾಂಗ್ ನೀಡಿದೆ.ಕಾಂಗ್ರೆಸ್ ಪಕ್ಷಕ್ಕೆ ಈ ಪರಿಯ ಅಜ್ಞಾನವೇ? ಪರಮಾಶ್ಚರ್ಯ. ವರ್ಷದ ಕೂಳಿನ ಪಂಚರತ್ನಗಳಿಗೂ, ಒಪ್ಪೊತ್ತಿನ ಹರುಷದ ನಕಲಿ ಗ್ಯಾರಂಟಿಗಳಿಗೂ ಹೋಲಿಕೆಯೇ? ಎಲ್ಲರಿಗೂ ಫ್ರೀ ಫ್ರೀ ಎಂದು ಹೇಳಿ ಪಂಗನಾಮ ಹಾಕಿದ್ದು ಗೊತ್ತಿಲ್ಲದ ಸಂಗತಿಯೇ? ಎಲ್ಲಾ ಕಾಲದಲ್ಲಿಯೂ ಟೋಪಿ ಹಾಕಬಹುದು ಎನ್ನುವ ಅಹಂಕಾರವೇ? ಎಂದು ಜೆಡಿಎಸ್ ಕಿಡಿಕಾರಿದೆ.ಕೆಟ್ಟ ದಾರಿಯಲ್ಲಿ ಅಧಿಕಾರ ಹಿಡಿಯುವುದು ಕಾಂಗ್ರೆಸ್ ಚಾಳಿ. ಶೆಟ್ಟರ್, ಸವದಿಯಂಥ ಬಿಜೆಪಿಗರನ್ನು ಬಲೆಬೀಸಿ ಬಿಗಿದಪ್ಪಿಕೊಂಡ ಹಸ್ತಪಕ್ಷಕ್ಕೆ, ಮೈಯ್ಯೆಲ್ಲಾ ಉರಿ ಹತ್ತಿಕೊಂಡಿದೆ. ಸ್ವಇಚ್ಛೆಯಿಂದಲೇ ಉರಿ ಇಟ್ಟುಕೊಂಡರೆ ಹೊಣೆ ಯಾರು? ಬಹುಶಃ, ಅಂಗೈಲಿ ಕೇಶವೇಕೆ ಬೆಳೆಯುತ್ತಿಲ್ಲವೆಂದು ಕೈಕೈ ಉಜ್ಜಿಕೊಳ್ಳುತ್ತಿದೆಯಾ ಕಾಂಗ್ರೆಸ್? ಎಂದು ಟೀಕಾ ಪ್ರಹಾರ ನಡೆಸಿದೆ.ಜೆಡಿಎಸ್‌ ಬಿಜೆಪಿ ಬಾಗಿಲಿಗೆ ಪದೇಪದೆ ಹೋಗುತ್ತದೆಂದು ಹಲ್ಲು ಗಿಂಜುವ ಕಾಂಗ್ರೆಸ್ಸಿಗರಿಗೆ; ಅದೇ ಬಿಜೆಪಿ ಜತೆ ಅಧಿಕಾರ ಅನುಭವಿಸಿದ ನಿತೀಶ್‌ ಕುಮಾರ್‌, ಮಮತಾ ಬ್ಯಾನರ್ಜಿ, ಸ್ಟಾಲಿನ್, ಉದ್ಧವಠಾಕ್ರೆ ಮನೆಗಳ ಸುತ್ತ ಗಿರಕಿ ಹೊಡೆಯಲು ಸಂಕೋಚವಿಲ್ಲ! ಗಂಗೆಯಲ್ಲಿ ಮಿಂದರೆ ಕಾಗೆ ಕೋಗಿಲೆ ಆಗುತ್ತದೆಯೇ ಕಾಮಾಲೆ ಕಣ್ಣಿನ ಕಾಂಗ್ರೆಸ್ಸಿಗರೇ? ಎಂದು ಜೆಡಿಎಸ್ ಕೇಳಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − 2 =
Remember me
