
ಬೆಂಗಳೂರು:ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ವಿವಿಧ ಹಂತಗಳ ಪ್ರಕ್ರಿಯೆಗಳನ್ನು ವೀಕ್ಷಿಸಲು ಆಗಮಿಸಿರುವ ಐದು ರಾಷ್ಟ್ರಗಳ ಚುನಾವಣಾ ಆಯೋಗಗಳ ಪ್ರತಿನಿಧಿಗಳ ಅಂತರ್ ರಾಷ್ಟ್ರೀಯ ತಂಡವು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದೆ.
ಬೆಳಗಾವಿ ಜಿಲ್ಲೆಗೆ ಆಗಮಿಸಿದ ಕಾಂಬೋಡಿಯಾ, ನೇಪಾಳ, ಮೊಲ್ಡೊವಾ, ಸಿಷೆಲ್ ಹಾಗೂ ತುನಿಷಿಯಾ ದೇಶಗಳ ಚುನಾವಣಾ ಆಯೋಗಗಳ ಹತ್ತು ಸದಸ್ಯರ ತಂಡವನ್ನು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಬರಮಾಡಿಕೊಂಡರು.
ಕಾಂಬೋಡಿಯಾ ದೇಶದ ರಾಷ್ಟ್ರೀಯ ಚುನಾವಣಾ ಮಂಡಳಿಯ ಸದಸ್ಯರಾದ ಹೆಲ್.ಸರಾಥ್, ಕಾಂಬೋಡಿಯಾ ದೇಶದ ರಾಷ್ಟ್ರೀಯ ಚುನಾವಣಾ ಮಂಡಳಿಯ ಮುಖ್ಯ ಕಾರ್ಯದರ್ಶಿ ಹೌಟ್ ಬೋರಿನ್, ಮೊಲ್ಡೊವಾ ದೇಶದ ಕೇಂದ್ರ ಚುನಾವಣಾ ಆಯೋಗದ ಸದಸ್ಯರಾದ ಡಾನಾ ಮಂಟೇನುವಾ, ಮೊಲ್ಡೊವಾ ದೇಶದ ಕೇಂದ್ರ ಚುನಾವಣಾ ಆಯೋಗದ ಸ್ಥಳೀಯ ಜಿಲ್ಲಾ ಚುನಾವಣಾ ಪರಿಷತ್ ಮುಖ್ಯಸ್ಥರಾದ ಆ್ಯಡ್ರಿಯನ್ ಗಮರ್ತಾ ಎಸಾನು, ನೇಪಾಳ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ದಿನೇಶ್ ಕುಮಾರ್ ಥಾಪಾಲಿಯಾ, ನೇಪಾಳ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಥಾನೇಶ್ವರಬುಸಾಲ್, ಸಿಷೆಲ್ ದೇಶದ ಚುನಾವಣಾ ಆಯೋಗದ ಮುಖ್ಯಸ್ಥರಾದ ಡ್ಯಾನಿ ಸಿಲ್ವಾ ಲುಕಾಸ್, ಸಿಷೆಲ್ ದೇಶದ ಚುನಾವಣಾ ಆಯೋಗದ ಆಯುಕ್ತರಾದ ನೊರ್ಲಿಸ್ ನಿಕೋಲಸ್ ರೋಸ್ ಹೋರೌ, ತುನಿಷಿಯಾ ಎಲೆಕ್ಷನ್ ಹೈಕಮಿಷನ್(ಐಎಸ್‌ಐಇ) ನ ಮಾನಸ್ರೀ ಮೊಹ್ಮದ್ ತ್ಲಿಲಿ, ತುನಿಷಿಯಾ ಎಲೆಕ್ಷನ್ ಹೈಕಮಿಷನ್(ಐಎಸ್‌ಐಇ) ನ ಪ್ರಾದೇಶಿಕ ನಿರ್ದೇಶಕರಾದ ಜೆಲ್ಲಾಲಿ ನಬೀಲ್ ಅವರು ಅಂತರ್ ರಾಷ್ಟ್ರೀಯ ನಿಯೋಗದಲ್ಲಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ವನಿತಾ ಮಹಾವಿದ್ಯಾಲಯದಲ್ಲಿ ಸ್ಥಾಪಿಸಲಾಗಿರುವ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ನಿಯೋಗದ ಸದಸ್ಯರು, ಮಸ್ಟರಿಂಗ್ ಕುರಿತು ಮಾಹಿತಿಯನ್ನು ಪಡೆದುಕೊಂಡರು.ಮತಗಟ್ಟೆ ಸಿಬ್ಬಂದಿ ನಿಯೋಜನೆ, ಸ್ಟ್ರಾಂಗ್ ರೂಮ್, ಮತಯಂತ್ರಗಳ ವಿತರಣೆ, ಮತಗಟ್ಟೆಗೆ ಚುನಾವಣಾ ಅಧಿಕಾರಿ/ಸಿಬ್ಬಂದಿ ತಂಡಗಳ ರವಾನೆ ಹಾಗೂ ಸಾರಿಗೆ ವ್ಯವಸ್ಥೆಯ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಾದರಿ ನೀತಿಸಂಹಿತೆ(ಎಂಸಿಸಿ) ಪಾಲನೆಯನ್ನು ಖಚಿತಪಡಿಸುವ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಎಂಸಿಸಿ ನಿಗಾ ಕೇಂದ್ರಕ್ಕೆ ಅಂತಾರಾಷ್ಟ್ರೀಯ ನಿಯೋಗ ಭೇಟಿ ನೀಡಿತು.
ಚುನಾವಣೆ ಘೋಷಣೆಯಾದ ತಕ್ಷಣವೇ ಮಾದರಿ ನೀತಿಸಂಹಿತೆ ಜಾರಿಗೆ ಬರುತ್ತದೆ. ಮಾದರಿ ನೀತಿಸಂಹಿತೆ ಉಲ್ಲಂಘನೆಗಳನ್ನು ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಸುಸಜ್ಜಿತ ಕಮಾಂಡ್ ಆಂಡ್ ಕಂಟ್ರೋಲ್ ಸೆಂಟರ್‌ನಲ್ಲಿ ಎಂಸಿಸಿ ತಂಡ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಇಡೀ ಜಿಲ್ಲೆಯಾದ್ಯಂತ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್ ಗಳನ್ನು ವೆಬ್ ಕ್ಯಾಮೆರಾ ಮೂಲಕ ಒಂದೇ ಕಡೆ ಕುಳಿತು ನಿಗಾ ವಹಿಸುವ ವ್ಯವಸ್ಥೆ, ಜಿಪಿಎಸ್ ಆಧಾರಿತ ವಾಹನಗಳೊಂದಿಗೆ ಕ್ಷೇತ್ರದಾದ್ಯಂತ ಸಂಚರಿಸುವ ಎ್.ಎಸ್.ಟಿ. ತಂಡಗಳಿಗೆ ತಕ್ಷಣವೇ ಮಾಹಿತಿ ರವಾನಿಸಲು ಅನುಕೂಲವಾಗುವಂತಹ ಏಕೀಕೃತ ವ್ಯವಸ್ಥೆಯ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಲಾಯಿತು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಕೇಂದ್ರ(ಎಂಸಿಎಂಸಿ)ಕ್ಕೆ ಭೇಟಿ ನೀಡಿದ ನಿಯೋಗದ ಸದಸ್ಯರು, ಪ್ರಮಾಣೀಕರಣ ಹಾಗೂ ನಿಗಾ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಂಡರು.ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಕೇಂದ್ರ(ಎಂಸಿಎಂಸಿ)ದ ನೋಡಲ್ ಅಧಿಕಾರಿ ಹಾಗೂ ವಾರ್ತಾ ಇಲಾಖೆಯ ಉಪ ನಿರ್ದೇಶಕರಾದ ಗುರುನಾಥ ಕಡಬೂರ ಕಾರ್ಯಚಟುವಟಿಕೆಗಳನ್ನು ವಿವರಿಸಿದರು.
ಎ.ಐ. ನಿಂದ ಸೃಜಿಸಲಾಗುವ ಸುಳ್ಳುಸುದ್ದಿಗಳ ಪತ್ತೆ, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಚುನಾವಣಾ ವೆಚ್ಚದ ಮೇಲೆ ಯಾವ ರೀತಿ ನಿಗಾ ವಹಿಸುವ ವಿಧಾನಗಳು ಮತ್ತು ಕಾನೂನು ಕ್ರಮಗಳ ಬಗ್ಗೆ ನಿಯೋಗದ ಸದಸ್ಯರು ಚರ್ಚಿಸಿದರು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 + 20 =
Remember me
