ಬೆಂಗಳೂರು:ಕರ್ನಾಟಕ ಸರ್ಕಾರವು ಪತ್ರಿಕೆಯಲ್ಲಿ ನೀಡಿರುವ ‘ಏಕೆ ತ್ರಿವರ್ಣಧ್ವಜ?’ ಜಾಹೀರಾತನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ 13 ಪ್ರಶ್ನೆಗಳನ್ನು ಹಾಕಿದ್ದಾರೆ.
‘ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದಕ್ಕಾಗಿ ರಾಜ್ಯದ ಜನರ ಪರವಾಗಿ ನಿಮಗೆ ಧನ್ಯವಾದಗಳು. ಇದರ ಜೊತೆಗೆ ಜನರ ಪರವಾಗಿ ನಾನು ಕೇಳುವ ಹದಿಮೂರು ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸುವಿರೆಂದು ನಂಬಿದ್ದೇನೆ’ ಎನ್ನುವ ಮೂಲಕ ಪ್ರಶ್ನೆಗಳನ್ನು ಆರಂಭಿಸಿರುವ ಸಿದ್ದರಾಮಯ್ಯ ಕೇಳಿದ್ದು ಇಷ್ಟು…
1) ಸ್ವತಂತ್ರ ಭಾರತದಲ್ಲಿ 52 ವರ್ಷಗಳವರೆಗೆ ದೇಶ ಹೆಮ್ಮೆ ಪಡುವ ರಾಷ್ಟ್ರಧ್ವಜವನ್ನು ಆರ್​ಎಸ್​​ಎಸ್ ಕಚೇರಿ ಮೇಲೆ ಹಾರಿಸದೇ ಇರಲು ಕಾರಣವೇನು?
2) 2001ರಲ್ಲಿ ದೇಶಭಕ್ತ ಯುವಕರು ರಾಷ್ಟ್ರಧ‍್ವಜ ಹಾರಿಸಲು ಬಂದಾಗ ಅವರನ್ನು ಹಿಡಿದು ಪೊಲೀಸರಿಗೆ ಕೊಟ್ಟಿರುವುದು ಏಕೆ?
3) ದೇಶಕ್ಕೆ ತ್ರಿವರ್ಣ ಧ್ವಜ ಅಲ್ಲ ಭಗವಾಧ‍್ವಜವೇ ಇರಬೇಕು ಎಂದು ಪ್ರತಿಪಾದಿಸುತ್ತಿದ್ದ ಆರ್​​ಎಸ್ಎಸ್ ಸರಸಂಘಚಾಲಕರಾದ ಕೆ.ಬಿ.ಹೆಡಗೆವಾರ್, ಎಂ.ಎಸ್ ಗೋಲ್ವಾಲ್ಕರ್ ಅವರ ನಿಲುವಿನ ಬಗ್ಗೆ ನಿಮ್ಮ ಮತ್ತು ನಿಮ್ಮ ಪಕ್ಷದ ಈಗಿನ ಅಭಿಪ್ರಾಯವೇನು?
4) ತ್ರಿವರ್ಣ ಧ್ವಜ ರಾಷ್ಟ್ರೀಯ ಮುನ್ನೋಟ, ಸತ್ಯ, ಇತಿಹಾಸ ಇಲ್ಲವೇ ಪರಂಪರೆಯಿಂದ ಪ್ರೇರಣೆ ಪಡೆದು ತಯಾರಿಸಿದ್ದಲ್ಲ, ಇದು ಫ್ರೆಂಚ್ ಕ್ರಾಂತಿಯ ಘೋಷಣೆಗಳ ಎರವಲು ಎಂದು ಆರ್​ಎಸ್​​ಎಸ್ ಸರಸಂಘಚಾಲಕ ಗೋಲ್ವಾಲ್ಕರ್ ತಮ್ಮ ‘ಬಂಚ್ ಆಫ್ ಥಾಟ್ಸ್’ ನಲ್ಲಿ ಹೇಳಿರುವುದನ್ನು ನೀವು ಧಿಕ್ಕರಿಸುತ್ತೀರಾ?.
5) ತ್ರಿವರ್ಣ ಧ್ವಜ ಎನ್ನುವುದು ಫ್ರೆಂಚ್ ಕ್ರಾಂತಿಯ ಘೋಷಣೆಗಳಾದ ಸ್ವಾತಂತ್ರ್ಯ, ಸಮಾನತೆ, ಮತ್ತು ಭಾತೃತ್ವದ ಬಗೆಗಿನ ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಗೀಳಿನಿಂದ ಹುಟ್ಟು ಪಡೆದಿರುವುದು” ಎಂದು ಗೋಲ್ವಾಲ್ಕರ್ ಹೇಳಿರುವುದನ್ನು ಈಗಲೂ ನೀವು ಒಪ್ಪುವಿರಾ?
6) ರಾಷ್ಟ್ರಧ್ವಜವನ್ನು ಭಾರತೀಯರು ಒಪ್ಪಲಾರರು, ಮೂರು ಎನ್ನುವುದೇ ಅಪಶಕುನ. ತ್ರಿವರ್ಣಧ್ವಜ ಖಂಡಿತ ದೇಶದ ಮೇಲೆ ಮಾನಸಿಕವಾಗಿ ದುಷ್ಪರಿಣಾಮವನ್ನು ಬೀರಲಿರುವುದು ಮಾತ್ರವಲ್ಲ ಹಾನಿಕಾರಿಯಾಗಬಹುದು ಎಂದು 1947ರಲ್ಲಿಯೇ ಆರ್​ಎಸ್​​ಎಸ್ ಮುಖವಾಣಿ ಆರ್ಗನೈಸರ್ ಪ್ರಕಟಿಸಿದ್ದ ಲೇಖನವನ್ನು ನೀವು ಒಪ್ಪುವಿರಾ?
7) ರಾಷ್ಟ್ರಧ್ವಜದ ಬಗೆಗಿನ ನಿಲುವನ್ನು ಆರ್ ಎಸ್ ಎಸ್ ಬದಲಾಯಿಸಿಕೊಂಡು ‘ಹರ್ ಘರ್ ಮೇ ತಿರಂಗಾ’ ಕಾರ್ಯಕ್ರಮವನ್ನು ಬೆಂಬಲಿಸುತ್ತದೆ ಎಂದು ನಿಮಗನಿಸುತ್ತಿದೆಯೇ?
8) ಬದಲಾಯಿಸಿಕೊಂಡಿದ್ದರೆ ಅದಕ್ಕೆ ಕಾರಣಗಳೇನು ಎಂದು ತಿಳಿಸುವಿರಾ?
9) ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ದೇಶದ ಜನ ತಮ್ಮ ಟ್ವೀಟರ್ ಡಿಪಿಯಲ್ಲಿ ರಾಷ್ಟ್ರಧ್ವಜವನ್ನ ಹಾಕಬೇಕೆಂದು ತಿಳಿಸಿದರೂ ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಮಾತ್ರ ಪ್ರಧಾನಿ ಕರೆಯನ್ನು ಪಾಲಿಸದೆ ಇರಲು ಕಾರಣವೇನು?.
10) 75 ವರ್ಷಗಳಿಂದ ಚಾಲ್ತಿಯಲ್ಲಿದ್ದ ಧ್ವಜ ಸಂಹಿತೆಗೆ ತಿದ್ದುಪಡಿ ಮಾಡಿ ಹತ್ತಿ ಮತ್ತು ರೇಷ್ಮೆ ಬಟ್ಟೆಯ ಬದಲಿಗೆ ಪಾಲಿಸ್ಟರ್ ಬಟ್ಟೆಯಲ್ಲಿಯೂ ರಾಷ್ಟ್ರಧ್ವಜ ತಯಾರಿಸಲು ಅನುಮತಿ ನೀಡಿರುವುದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ ಎಂದು ನಿಮಗೆ ಅನಿಸುವುದಿಲ್ಲವೇ?
11) ಧ್ವಜ ಸಂಹಿತೆಗೆ ತಿದ್ದುಪಡಿ ತಂದು ಪಾಲಿಸ್ಟರ್ ಬಟ್ಟೆ ಬಳಕೆಗೂ ಅವಕಾಶ ನೀಡಿರುವುದರಿಂದ ಗರಗ ಖಾದಿ ಗ್ರಾಮದ್ಯೋಗ ಕೇಂದ್ರದ ನೂರಾರು ಕಾರ್ಮಿಕರು ಮುಷ್ಕರದಲ್ಲಿ ತೊಡಗಿರುವುದು ನಿಮ್ಮ ಗಮನಕ್ಕೆ ಬಂದಿದೆಯೇ?
12) ಪ್ರಧಾನಿ ಮೋದಿ ಅವರು ನೀಡಿರುವ ಕರೆಯನ್ನು ಪಾಲಿಸುವ ಏಕೈಕ ಕಾರಣಕ್ಕಾಗಿ ಸಾಮಾನ್ಯ ಜನರಿಂದ ಬಲತ್ಕಾರವಾಗಿ ದುಡ್ಡು ಕಿತ್ತುಕೊಂಡು ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವ ನೀವು, ಈ ಮೂಲಕ ರಾಷ್ಟ್ರಧ್ವಜದ ಮೇಲಿನ ಗೌರವಕ್ಕೆ ಕುಂದುತರುತ್ತಿದ್ದೇವೆ ಎಂದು ನಿಮಗೆ ಅನಿಸುವುದಿಲ್ಲವೇ?
13) ಮೇಕ್ ಇನ್ ಇಂಡಿಯಾದ ಪ್ರಚಾರ ಮಾಡುವ ಬಿಜೆಪಿ ಸರ್ಕಾರವು ಧ್ವಜಸಂಹಿತೆಗೆ ತಿದ್ದುಪಡಿ ಮಾಡಿ ಪಾಲಿಸ್ಟರ್ ಬಟ್ಟೆ ಬಳಸಲು ಅವಕಾಶ ನೀಡಿರುವುದರಿಂದ ಚೀನಾದಂತಹ ದೇಶಗಳಿಂದ ಕಡಿಮೆ ಬೆಲೆಯ ರಾಷ್ಟ್ರಧ್ವಜಗಳು ಬಂದು ರಾಶಿಬೀಳುತ್ತಿರುವುದನ್ನು ಹೇಗೆ ಸಮರ್ಥಿಸಿಕೊಳ್ಳುತ್ತೀರಿ?
ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ದೇಶದ ಜನ ತಮ್ಮ ಟ್ವೀಟರ್ ಡಿಪಿಯಲ್ಲಿ ರಾಷ್ಟ್ರಧ್ವಜವನ್ನ ಹಾಕಬೇಕೆಂದು ತಿಳಿಸಿದರೂ ಆರ್ ಎಸ್ ಎಸ್ ಸರಸಂಘ ಚಾಲಕ@DrMohanBhagwatಅವರು ಮಾತ್ರ@PMOIndiaಕರೆಯನ್ನು ಪಾಲಿಸದೆ ಇರಲು ಕಾರಣವೇನು? 8/14#AnswerMadiBommaipic.twitter.com/BtUq3NoEh3
— Siddaramaiah (@siddaramaiah)August 12, 2022

ಇವಿಎಂ ಬೇಡ, ಬ್ಯಾಲೆಟ್​ ಪೇಪರೇ ಬೇಕು ಎಂದ ಅರ್ಜಿ ‘ಸುಪ್ರೀಂ’ನಿಂದ ವಜಾ: ವಕೀಲ ಹೇಳಿದ್ದೇನು? ಕೋರ್ಟ್​ ಕೇಳಿದ್ದೇನು?

ವಿಸ್ಕಿ ಹೀರುವ ಆಸೆಯಲ್ಲಿ 5.35 ಲಕ್ಷ ರೂ. ಕಳಕೊಂಡ ಮಹಿಳೆ: ಮದ್ಯ ಸೇವಿಸೋ ಮೊದ್ಲೇ ಆಗೋಯ್ತು ಎಡವಟ್ಟು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 6 =
Remember me
