ಬೆಂಗಳೂರು:ದೇಶದಲ್ಲೇ ಕರ್ನಾಟಕವು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್​ಇಪಿ-2019) ವ್ಯವಸ್ಥಿತವಾಗಿ ಜಾರಿಗೊಳಿಸಲಿರುವ ಮೊದಲ ರಾಜ್ಯಗಳಲ್ಲಿ ಒಂದಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ನೂತನ ರಾಷ್ಟ್ರೀಯ ನೀತಿ ಅನುಮೋದನೆಗೊಂಡ ನಂತರ ಶುಕ್ರವಾರ ಕರಡು ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷರಾದ ಡಾ. ಕೆ. ಕಸ್ತೂರಿರಂಗನ್ ಅವರೊಂದಿಗೆ ವೆಬಿನಾರ್ ಮೂಲಕ ಮಾತನಾಡಿದ ಅವರು, ವಿವಿಧ ಸ್ತರಗಳ, ನಾನಾ ಅಂತರಗಳಿರುವ ಈ ರಾಷ್ಟ್ರದ ಎಲ್ಲರಿಗೂ ಅನ್ವಯವಾಗಬಹುದಾದ ನೂತನ ಶಿಕ್ಷಣ ನೀತಿಯನ್ನು ಶ್ರಮವಹಿಸಿ ರೂಪಿಸಿದ್ದಕ್ಕೆ ಕಸ್ತೂರಿರಂಗನ್ ಅವರಿಗೆ ಕರ್ನಾಟಕ ಸರ್ಕಾರದ ಪರವಾಗಿ ಧನ್ಯವಾದ ಅರ್ಪಿಸಿದರು.
ಇದನ್ನೂ ಓದಿ:ರಾಷ್ಟ್ರೀಯ ಶಿಕ್ಷಣ ನೀತಿ ಕೇಂದ್ರದೊಂದಿಗೆ ರಾಜ್ಯದಲ್ಲೂ ಜಾರಿಗೆ; ಸಚಿವ ಅಶ್ವತ್ಥನಾರಾಯಣ ಘೋಷಣೆ
34 ವರ್ಷಗಳ ಬಳಿಕ ಇಂದಿನ ಹಾಗೂ ಭವಿಷ್ಯದ ಶೈಕ್ಷಣಿಕ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ ಸಮಗ್ರ ನೀತಿಯಾಗಿದೆ. ಇದು ಸರ್ವರಿಗೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಸಮಾಜವನ್ನು ಒಂದು ಸುಸ್ಥಿರ, ಸಮಾನ ಹಾಗೂ ಜೀವಂತಿಕೆಯುಳ್ಳ ಸಮಾಜವನ್ನಾಗಿ ಮಾರ್ಪಡಿಸಲು ಶ್ರಮಿಸುವಂತಹ ಒಂದು ಗಟ್ಟಿಯಾದ ನೀತಿಯಾಗಿದೆ. ಇಂತಹ ನೀತಿಯನ್ನು ಅನುಷ್ಠಾನಗೊಳಿಸಲು ಕರ್ನಾಟಕ ಸರ್ಕಾರ ಉತ್ಸುಕವಾಗಿದೆ ಎಂದು ಸಚಿವರು ಹೇಳಿದರು.
ಕರ್ನಾಟಕ ನನ್ನ ರಾಜ್ಯ:ಕೇರಳ ನನ್ನ ಜನ್ಮಭೂಮಿಯಾಗಿದ್ದರೂ ಕರ್ನಾಟಕ ನನ್ನ ಕರ್ಮಭೂಮಿ. ಕರ್ನಾಟಕ ನನ್ನ ರಾಜ್ಯ ಎಂದು ಹೆಮ್ಮೆಯಿಂದ ಹೇಳಿದ ಕಸ್ತೂರಿರಂಗನ್, ಭಾರತ ದೇಶ ವಿವಿಧ ರೀತಿಯ ಸಾಮಾಜಿಕ, ಭಾಷೆ, ಧರ್ಮ, ಸಂಸ್ಕೃತಿ, ಗ್ರಾಮೀಣ, ನಗರ, ಗುಡ್ಡಗಾಡು, ಅಭಿವೃದ್ಧಿ ಹೊಂದಿದ, ಹಿಂದುಳಿದ ಪ್ರದೇಶಗಳಂತಹ ಹಲವು ಸ್ತರಗಳ ಪ್ರದೇಶಗಳನ್ನೊಳಗೊಂಡಿದ್ದು, ಮುಂದಿನ 20 ವರ್ಷಗಳಲ್ಲಿ ದೇಶವು ಕ್ಷಿಪ್ರವಾಗಿ ಅಭಿವೃದ್ಧಿ ಹೊಂದುವ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿ ರೂಪಿಸಲಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಕಳೆದ ದಿನಗಳನ್ನು ಸ್ಮರಿಸಿಕೊಂಡ ಕಸ್ತೂರಿರಂಗನ್, ನಾಡಿನ ಶೈಕ್ಷಣಿಕ ಅಭಿವೃದ್ಧಿಯ ನಿಟ್ಟಿನಲ್ಲಿ ತಮ್ಮ ಉತ್ಸುಕತೆ, ಆಸಕ್ತಿ ಮೆಚ್ಚುವಂತಹದ್ದಾಗಿದ್ದು, ಕರ್ನಾಟಕ ಈಗಾಗಲೇ ಶೈಕ್ಷಣಿಕವಾಗಿ ಇಡೀ ದೇಶದಲ್ಲೇ ಮಂಚೂಣಿಯಲ್ಲಿರುವುದನ್ನು ರಾಷ್ಟ್ರ ಗಮನಿಸಿದೆ ಎಂದರು ಶ್ಲಾಘಿಸಿದರು.
ಇದನ್ನೂ ಓದಿ:ಎಂಫಿಲ್​ ರದ್ದು, ಪದವಿ ಶಿಕ್ಷಣ ಸ್ವರೂಪದಲ್ಲಿ ಬದಲಾವಣೆ; ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಏನೇನಿದೆ?
ಕರ್ನಾಟಕದಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಬಹುತೇಕ ಸಂಗತಿಗಳು ಹೊಸ ಶಿಕ್ಷಣ ನೀತಿಯಲ್ಲಿ ಅಳವಡಿಕೆಯಾಗಿದ್ದು, ಈ ಹೊಸ ನೀತಿಯಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ. ದೇಶದ ಶಿಕ್ಷಣ ವ್ಯವಸ್ಥೆಯು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಜನಗಳನ್ನು ಪಡೆಯುವ ಮುನ್ನವೇ ದೂರದೃಷ್ಟಿಯ ಧ್ಯೇಯಗಳನ್ನು ಅಳವಡಿಸಿಕೊಂಡ ಕರ್ನಾಟಕ ಇತರೆ ರಾಜ್ಯಗಳಿಗಿಂತ ಮುಂದಿದೆ ಎಂದು ಹೇಳಿದ ಕಸ್ತೂರಿ ರಂಗನ್, ಸಮಿತಿ ಸದಸ್ಯರಾದ ಕರ್ನಾಟಕದವರೇ ಆದ ಪ್ರೊ.ಎಂ.ಕೆ. ಶ್ರೀಧರ್ ಅವರ ಸೇವೆಯನ್ನು ಶ್ಲಾಘಿಸಿ, ಸಮಿತಿ ರೂಪಿಸಿದ ಈ ವರದಿಯ ರೂಪುರೇಷೆ ಸಿದ್ಧಪಡಿಸಲು ಅವರ ಕೊಡುಗೆಯನ್ನು ಅತ್ಯಂತ ಖುಷಿಯಿಂದ ವಿವರಿಸಿ ಸಮಿತಿಯಲ್ಲಿ ಅತ್ಯಂತ ಕೇಂದ್ರೀಕೃತ ಪಾತ್ರ ನಿರ್ವಹಿಸಿದರು ಎಂದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದಲ್ಲಿ ಶೈಕ್ಷಣಿಕ ಕ್ರಾಂತಿಯೇ ಆಗಲಿದ್ದು, ಅದು ಕರ್ನಾಟಕದಿಂದಲೇ ಆರಂಭವಾಗಲಿದೆ ಎಂಬ ನಂಬುಗೆ ನನ್ನದಾಗಿದೆ ಎಂದು ಕಸ್ತೂರಿರಂಗನ್ ಆಶಯ ವ್ಯಕ್ತಪಡಿಸಿದರು.
ಆಗಸ್ಟ್​ನಲ್ಲಿ ಜಾರಿಗೆ ತರಲು ಕ್ರಮ:ಹೊಸ ಶಿಕ್ಷಣ ನೀತಿ ಜಾರಿಗೊಳಿಸುವ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ ಸಮಗ್ರವಾಗಿ ಚರ್ಚೆ ನಡೆಸಿದ ಸುರೇಶ್ ಕುಮಾರ್, ಕರ್ನಾಟಕದ ಅವಶ್ಯಕತೆಗಳಿಗನುಗುಣವಾಗಿ ಇದಕ್ಕೆ ಪೂರಕವಾದ ರೂಪುರೇಷೆ ಸಿದ್ಧಪಡಿಸಬೇಕೆಂದು ಸೂಚಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ ರೂಪುರೇಷೆ ಪ್ರಕಟಗೊಂಡಿದ್ದು, ಇಡೀ ದೇಶದ ಶಿಕ್ಷಣ ವ್ಯವಸ್ಥೆಗೆ ಹೊಸ ದಿಕ್ಕು ತೋರಿಸಿದೆ. ಸ್ವಾತಂತ್ರ್ಯಾನಂತರ ಕೇವಲ ಎರಡೇ ಬಾರಿ ಶಿಕ್ಷಣ ನೀತಿ ಪರಿಷ್ಕರಣೆಗೊಂಡಿರುವುದು ಮತ್ತು ಇಂದಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ರೀತಿಯಲ್ಲಿ ಕೇಂದ್ರ ಸರ್ಕಾರವು ನೀತಿಯನ್ನು ಪ್ರಕಟಿಸಿರುವುದು ನಮ್ಮ ಸರ್ಕಾರದ ಜವಾಬ್ದಾರಿಯನ್ನು ಹೆಚ್ಚಿಸಿದೆ. ಇದೇ ಫೆಬ್ರವರಿಯಲ್ಲಿ ಕರ್ನಾಟಕಕ್ಕೆ ವಿಶೇಷ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಲಾಗಿದ್ದು, ಈಗ ರೂಪುರೇಷೆ ಸಿದ್ಧಗೊಳಿಸಲಿದೆ. 15 ದಿನಗಳ ಅವಧಿಯಲ್ಲಿ ಕೇಂದ್ರದ ನೀತಿಯನ್ನು ಹಾಗೂ ರಾಜ್ಯದ ನೀತಿಯನ್ನು ಅಭ್ಯಸಿಸಿ ಕರ್ನಾಟಕದ ಶಿಕ್ಷಣ ನೀತಿಯನ್ನು ಹೊರತರಲು ಕ್ರಮ ವಹಿಸಬೇಕು. ಹಾಗೆಯೇ ಆಗಸ್ಟ್ 20ಕ್ಕೆ ಲೋಕಾರ್ಪಣೆಗೊಳಿಸುವ ಸಾಧ್ಯತೆಗಳ ಕುರಿತು ಆಲೋಚಿಸಬೇಕು ಎಂದು ಸುರೇಶ್ ಕುಮಾರ್ ಹೇಳಿದರು.
ಸಭೆಯಲ್ಲಿ ವಿಧಾನಪರಿಷತ್ತಿನ ಸದಸ್ಯರಾದ ಅರುಣ್ ಶಹಾಪುರ, ಡಾ. ವೈ.ಎ.ನಾರಾಯಣಸ್ವಾಮಿ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಸಾಶಿಇ ಆಯುಕ್ತ ಡಾ. ಕೆ.ಜಿ. ಜಗದೀಶ್, ಸಮಗ್ರ ಶಿಕ್ಷಣ- ಕರ್ನಾಟಕ ಯೋಜನಾ ನಿರ್ದೇಶಕಿ ದೀಪಾ ಚೋಳನ್, ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಮತ್ತೊಂದು ಆಘಾತಕಾರಿ ಹಂತ ತಲುಪಿದ ಕರೊನಾ; ಭಾರತದ ಮೊದಲ ಪ್ರಕರಣ ವರದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + one =
Remember me
