ತಿರುವನಂತಪುರಂ:ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಮೊಬೈಲ್​ ಕಳ್ಳತನದ ಸುಳ್ಳು ಆರೋಪ ಹೊರಿಸಿ, ಸಾರ್ವಜನಿಕರ ಎದುರಲ್ಲಿ ಅವಮಾನಿಸಿದ ಮಹಿಳಾ ಪೊಲೀಸ್​ ಅಧಿಕಾರಿಯನ್ನು ಸಮರ್ಥಿಸಿಕೊಂಡ ಸರ್ಕಾರಕ್ಕೆ ಛೀಮಾರಿ ಹಾಕಿ, ಮೂಲಭೂತ ಹಕ್ಕುಗಳ ಉಲ್ಲಂಘನೆ ಅಡಿಯಲ್ಲಿ ಬಾಲಕಿಗೆ 1.5 ಲಕ್ಷ ರೂ. ಪರಿಹಾರವನ್ನು ಕೊಡುವಂತೆ ಹೇಳಿದ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.
ಕೇರಳ ಹೈಕೋರ್ಟ್​ನ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಅಧಿಕಾರಿ ಮಾಡಿದ ತಪ್ಪಿಗೆ ಸರ್ಕಾರ ಹೊಣೆಯಾಗುವುದಿಲ್ಲ. ರಾಜ್ಯದಲ್ಲಿ ಪೊಲೀಸ್​ ಅಧಿಕಾರಿಗಳ ವಿರುದ್ಧ ಇದೇ ರೀತಿಯ ಹಲವಾರು ದೂರುಗಳು ಬರುತ್ತಿವೆ. ಇಂತಹ ಎಲ್ಲ ಪ್ರಕರಣಗಳಲ್ಲೂ ಇದೇ ರೀತಿಯ ಆದೇಶ ನೀಡಿದರೆ, ಭವಿಷ್ಯದಲ್ಲಿ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ ಎಂದು ಕೇರಳ ಸರ್ಕಾರ ವಿಭಾಗೀಯ ಪೀಠಕ್ಕೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ತಿಳಿಸಿದೆ. ಪೊಲೀಸ್​ ಇಲಾಖೆಯ ದೌರ್ಜನ್ಯದ ವಿರುದ್ಧ ಜನರು ಮುಗಿಬಿದ್ದಿದ್ದು, ಇದರ ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತದೆ ಎಂದು ಕೇರಳ ಸರ್ಕಾರ ಮೇಲ್ಮನವಿಯಲ್ಲಿ ಅಳಲು ತೋಡಿಕೊಂಡಿದೆ.
ಇದಕ್ಕೂ ಮುನ್ನ ತೀರ್ಪು ನೀಡಿದ್ದ ಹೈಕೋರ್ಟ್​ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ದೇವನ್​ ರಾಮಚಂದ್ರನ್​, ಘಟನೆಯಿಂದ ಬಾಲಕಿಗೆ ಆಗಿರುವ ಮಾನಸಿಕ ಹಿಂಸೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಆಕೆಯ ಮೂಲಭೂತ ಹಕ್ಕುಗಳ ಉಲ್ಲಂಘನೆ ಅಡಿಯಲ್ಲಿ ಆಕೆಗೆ 1.5 ಲಕ್ಷ ರೂ. ಪರಿಹಾರವನ್ನು ನೀಡುವಂತೆ ಆದೇಶಿಸಿದರು. ಅಲ್ಲದೆ, ಕಾನೂನು ಹೋರಾಟಕ್ಕೆ ಖರ್ಚಾದ 25 ಸಾವಿರ ರೂ. ಹಣದ ಜತೆ ಒಟ್ಟಾರೆ ಹಣ ಪಾವತಿಸುವಂತೆ ಹೇಳಿದರು. ಅಲ್ಲದೆ, ಬಾಲಕಿ ಹಾಗೂ ಆಕೆಯ ತಂದೆಯ ವಿಚಾರದಲ್ಲಿ ಬೇಜವಬ್ದಾರಿಯುತವಾಗಿ ನಡೆದುಕೊಂಡು ಮಹಿಳಾ ಪೊಲೀಸ್​ ಅಧಿಕಾರಿಯ ವಿರುದ್ಧ ಶಿಸ್ತುಕ್ರಮವನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದ್ದರು.
ಘಟನೆಯ ಹಿನ್ನೆಲೆ ಏನು?ಆಗಸ್ಟ್​ 27ರಂದು ನಡೆದ ಘಟನೆ ಇದಾಗಿದೆ. 38 ವರ್ಷದ ಜಯಚಂದ್ರನ್, ತನ್ನ ಮಗಳೊಂದಿಗೆ ಇಸ್ರೋ ಘಟಕಕ್ಕೆ ಉಪಕರಣಗಳನ್ನು ಸಾಗಿಸುವ ಬೃಹತ್ ಟ್ರೈಲರ್‌ನ ಚಲನೆಯನ್ನು ವೀಕ್ಷಿಸಲು ಇಲ್ಲಿನ ಅಟ್ಟಿಂಗಲ್ ಬಳಿಯ ಹೊರವಲಯದಲ್ಲಿರುವ ಮುಖ್ಯ ರಸ್ತೆಗೆ ಹೋಗಿದ್ದರು. ಈ ವೇಳೆ ಕೇರಳ ಪೊಲೀಸ್​ ಇಲಾಖೆಯ ಪಿಂಕ್ ಪೊಲೀಸ್​ ಘಟಕದ ಮಹಿಳಾ ಪೊಲೀಸ್​ ಅಧಿಕಾರಿ ರೆಜಿತಾ ಅವರು​ ತಮ್ಮ ಮೊಬೈಲ್​ ಕಳೆದುಹೋಗಿತ್ತು. ಮೊಬೈಲ್​ ಕಳೆದು ಹೋಗುವ ಮುನ್ನ ರೆಜಿತಾ ಅವರಿದ್ದ ಗಸ್ತುವಾಹನ ಪಕ್ಕದಲ್ಲೇ ಜಯಚಂದ್ರನ್​ ಇದ್ದಿದ್ದರಿಂದ ಅವರ ಮೇಲೆ ಅನುಮಾನ ವ್ಯಕ್ತಪಡಿಸಿದರು. ಸ್ವಲ್ಪವೂ ಯೋಚಿಸದೇ ಮೊಬೈಲ್​ ಕದ್ದಿರುವುದು ಇವರೇ ಎಂದು ಭಾವಿಸಿದ ರೆಜಿತಾ, ಸಾರ್ವಜನಿಕರ ಎದುರಲ್ಲೇ ಬಾಲಕಿ ಮತ್ತು ಆಕೆಯ ತಂದೆಗೆ ಕೆಟ್ಟ ಪದಗಳಿಂದ ಅವಮಾನಿಸಿದರು. ಹತ್ತಿರದ ಪೊಲೀಸ್​ ಠಾಣೆಗೆ ಕರೆದೊಯ್ಯುವುದಾಗಿ ಬೆದರಿಕೆ ಹಾಕಿದರು. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದರು. ಇದಾದ ಬಳಿಕ ರೆಜಿತಾ ಅವರ ಮೊಬೈಲ್​ ಪೊಲೀಸ್​ ವಾಹನದಲ್ಲೇ ಪತ್ತೆಯಾಯಿತು. ಇದಿಷ್ಟು ಘಟನೆಯನ್ನು ದಾರಿಹೋಕರೊಬ್ಬರು ವಿಡಿಯೋ ರೆಕಾರ್ಡ್​ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ವಿಡಿಯೋ ವೈರಲ್​ ಸಹ ಆಗಿತ್ತು.
ಇದಾದ ಬಳಿಕ ತಮಗಾದ ಅವಮಾನಕ್ಕೆ ನ್ಯಾಯ ಕೇಳಬೇಕೆಂದು ಆಗಸ್ಟ್​ 31ರಂದು ಪೊಲೀಸ್​ ಮುಖ್ಯಸ್ಥ ಅನಿಲ್​ ಕಾಂತ್​ ಬಳಿ ತೆರಳಿ ಮಹಿಳಾ ಪೊಲೀಸ್​ ಅಧಿಕಾರಿ ರೆಜಿತಾ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಜಯಚಂದ್ರನ್​ ದೂರು ನೀಡಿದ್ದರು. ಸಾರ್ವಜನಿಕವಾಗಿ ನನ್ನ ಮಗಳನ್ನು ಅವಮಾನಿಸಿದ್ದರಿಂದ ಅವಳ ಆಘಾತದಿಂದ ಖಿನ್ನತೆಗೆ ಜಾರಿದ್ದಾಳೆ ಎಂದು ಜಯಚಂದ್ರನ್​ ದೂರು ನೀಡಿದ್ದರು. ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಅನಿಲ್​ ಕಾಂತ್​ ಭರವಸೆ ನೀಡಿ, ತನಿಖೆಗೆ ಆದೇಶ ನೀಡಿದ್ದರು. ಆದರೆ, ರೆಜಿತಾ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ಒಳ್ಳೆಯ ಜಾಗಕ್ಕೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಸಾಕಷ್ಟು ಮನವಿ ಮತ್ತು ದೂರುಗಳನ್ನು ನೀಡಿದರೂ ಜಯಚಂದ್ರನ್​ ಕುಟುಂಬಕ್ಕೆ ಯಾವುದೇ ಪ್ರಯೋಜನ ಆಗುವುದಿಲ್ಲ. ಕೊನೆಗೆ ನ್ಯಾಯಾಲಯ ಮೆಟ್ಟಿಲೇರಿದ ಕುಟುಂಬ, ರೆಜಿತಾ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಕೋರ್ಟ್​ ತರಾಟೆಮಹಿಳಾ ಅಧಿಕಾರಿಯನ್ನು ಕೇರಳ ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿತ್ತು. ಕೋರ್ಟ್​ ಮೆಟ್ಟಿಲೇರಿದ್ದ ಬಾಲಕಿ 50 ಲಕ್ಷ ರೂ. ಪರಿಹಾರ ಕೊಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಳು. ಹಿರಿಯ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಕೂಡ ಮಹಿಳಾ ಪೊಲೀಸ್​ ಮೇಲೆ ಯಾವುದೇ ಸೂಕ್ತ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ನ್ಯಾಯಕ್ಕಾಗಿ ನ್ಯಾಯಾಲಯದ ಬಾಗಿಲಿಗೆ ಬಂದಿದ್ದೇವೆ. ಸಾರ್ವಜನಿಕರ ಎದುರು ಅವಮಾನಿಸಿದ ಆಘಾತದಿಂದ ಖಿನ್ನತೆಗೆ ಜಾರಿ ಆಪ್ತ ಸಮಾಲೋಚನೆಯನ್ನು ಪಡೆದಿದ್ದೇನೆ. ಈಗಲೂ ಮಹಿಳಾ ಅಧಿಕಾರಿಯ ಚುಚ್ಚು ಮಾತುಗಳು ತೀವ್ರ ನೋವುಂಟು ಮಾಡುತ್ತಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಬಾಲಕಿ ಉಲ್ಲೇಖಿಸಿದ್ದಳು. ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ತಪ್ಪಿತಸ್ಥ ಮಹಿಳಾ ಪೊಲೀಸ್ ಅಧಿಕಾರಿಯ ವಿರುದ್ಧ ತೆಗೆದುಕೊಂಡ ಕ್ರಮವನ್ನು ತಿಳಿಸುವಂತೆ ಪೊಲೀಸ್​ ಇಲಾಖೆಗೆ ಕೋರಿತು ಮತ್ತು ಇದನ್ನು ‘ಸಣ್ಣ’ ಘಟನೆ ಎಂದು ಸುಮ್ಮನಿರಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿತು.​ ವರದಿ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.
ಮಹಿಳಾ ಅಧಿಕಾರಿ ಆ ಚಿಕ್ಕ ಬಾಲಕಿಗೆ ಮನಸ್ಸಿಗೆ ನೋವುಂಟು ಮಾಡುವಂತೆ ನಡೆದುಕೊಂಡಿಲ್ಲ. ಅನುಚಿತವಾಗಿ ವರ್ತನೆ ಮಾಡಿಲ್ಲ ಎಂದು ರಾಜ್ಯ ಸರ್ಕಾರದ ವರದಿ ನೀಡಿತು. ಅದಕ್ಕೆ ಸಾಕ್ಷಿ ಎಂಬಂತೆ ನಾಲ್ವರು ಸಾಕ್ಷಿಗಳನ್ನು ಕೂಡಾ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಹಾಗೆಯೇ ಆ ಮಗುವಿಗೆ ಪರಿಹಾರವನ್ನು ನಿರಾಕರಣೆ ಮಾಡಿತ್ತು. ಮಗು ಅವಮಾನದಿಂದ ಅಳಲಿಲ್ಲ. ಜನರು ಸೇರಿದ್ದನ್ನು ನೋಡಿ ಅತ್ತಿದೆ ಎಂದು ಸರ್ಕಾರವು ಸಮರ್ಥನೆ ನೀಡಿತ್ತು. ಆದರೆ, ಸರ್ಕಾರಕ್ಕೆ ಛೀಮಾರಿ ಹಾಕಿದ್ದ ಕೋರ್ಟ್​ ಪರಿಹಾರ ನೀಡುವಂತೆಯು ಮತ್ತು ಮಹಿಳಾ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆಯೂ ಆದೇಶ ಹೊರಡಿಸಿತ್ತು.(ಏಜೆನ್ಸೀಸ್​)
ಮಹಿಳಾ ಪೊಲೀಸ್​ ಬೆನ್ನಿಗೆ ನಿಂತ ಕೇರಳ ಸರ್ಕಾರದ ವಿರುದ್ಧವೇ ಗೆದ್ದು ಬೀಗಿದ 8ರ ಬಾಲೆ!

ಸಿಎಂ ಬೊಮ್ಮಾಯಿ ಅವರನ್ನು ಎಂ.ಎಸ್​. ಧೋನಿಗೆ ಹೋಲಿಸಿ ಸಂಸದೆ ಸುಮಲತಾ ಕೊಟ್ಟ ಕಾರಣ ಹೀಗಿದೆ…

ಮೇನಲ್ಲಿ ಶರಣ್ ಅವತಾರ ಪುರುಷ; ಕೊನೆಗೂ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 14 =
Remember me
