ವರ್ಗ:ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ
ಗಣಿ ಅಪಘಾತ -
ಕೈಗಾರಿಕಾ ಅಪಘಾತಗಳಲ್ಲೆಲ್ಲ ಅತ್ಯಂತ ಅಪಾಯಕಾರಿಯೂ ತೀವ್ರ ಸ್ವರೂಪದ್ದೂ ಆದ್ದು ಗಣಿಗಳಲ್ಲಿಯ ಅಪಘಾತ. ಇದಕ್ಕೆ ಈ ಕೈಗಾರಿಕೆಯ ಸ್ವರೂಪವೇ ಮುಖ್ಯವಾದ ಕಾರಣ. ಗಣಿಗಾರಿಕೆಯಲ್ಲಿ ಅಪಘಾತದಿಂದ ಮೃತರಾಗುವವರ ಸಂಖ್ಯೆ ಕೂಡ ಇತರ ಕೈಗಾರಿಕೆಗಳಿಗೆ ಹೋಲಿಸಿದರೆ ಹೆಚ್ಚು, ನೆಲದಡಿಯಲ್ಲಿರುವ ಅದುರು ತೆಗೆಯುವ ಕೆಲಸದಲ್ಲಿ ತೊಡಗಿದಾಗ ಅನಿರೀಕ್ಷಿತವಾದ ಅಪಾಯಗಳು ಬಂದೊದಗುವುದು ಸಹಜ. ಅಪಘಾತದ ಸ್ವರೂಪ ಗಣಿಯಿಂದ ಗಣಿಗೆ ಭಿನ್ನವಾಗಿರುತ್ತದೆ. ಸ್ಫೋಟ, ಮಣ್ಣಿನ ಕುಸಿತ, ಮೇಲಿನಿಂದ ಭಾರವಾದ ವಸ್ತುವಿನ ಪತನ-ಇಂಥ ಅಪಘಾತಗಳಿಗೆ ಕಾರ್ಮಿಕರು ಈಡಾಗಬೇಕಾಗುತ್ತದೆ.

ಗಣಿಗಾರಿಕೆಯಲ್ಲಿ ಅಪಘಾತಗಳ ಸಾಧ್ಯತೆ ಹೆಚ್ಚಾಗಿರುವುದರಿಂದ ಇತರ ಕೈಗಾರಿಕೆಗಳಿಗಿಂತ ಇದರಲ್ಲಿ ಇವುಗಳ ವಿರುದ್ಧ ಹೆಚ್ಚಿನ ರಕ್ಷಣೆಯನ್ನೊದಗಿಸುವುದು ಅತ್ಯಂತ ಅವಶ್ಯಕ. ಎಲ್ಲ ರಾಷ್ಟ್ರಗಳೂ ಗಣಿ ಕಾನೂನುಗಳ ಮೂಲಕ ಅಪಘಾತಗಳ ವಿರುದ್ಧ ಕಾರ್ಮಿಕನಿಗೆ ರಕ್ಷಣೆಯನ್ನೊದಗಿಸುತ್ತಿವೆ. ಗಣಿಗಳಲ್ಲಿ ಅಪಘಾತ ನಡೆಯದಂತೆ ವಿಶೇಷವಾದ ಎಚ್ಚರಿಕೆ ವಹಿಸುವುದು ಅಗತ್ಯ. ಗಣಿಯೊಳಗೆ ಉತ್ತಮವಾದ ಬೆಳಕಿರುವಂತೆ ನೋಡಿಕೊಳ್ಳುವುದು, ಆಸ್ಫೋಟಕಗಳನ್ನು ಎಚ್ಚರಿಕೆಯಿಂದ ಉಪಯೋಗಿಸುವುದು, ಗಣಿ ಉತ್ಪಾದಿತ ವಸ್ತುಗಳನ್ನು ಜಾಗರೂಕತೆಯಿಂದ ಮೇಲಕ್ಕೆ ಸಾಗಿಸುವುದು, ಶೋಧಪ್ರದೇಶಗಳನ್ನು ಉತ್ತಮವಾಗಿಟ್ಟಿರುವುದು- ಈ ಕ್ರಮಗಳನ್ನು ಪ್ರತಿಯೊಂದು ಗಣಿಯಲ್ಲೂ ಅನುಸರಿಸಬೇಕಾಗುತ್ತದೆ. ಎಷ್ಟೇ ಎಚ್ಚರಿಕೆಯಿಂದಿದ್ದರೂ ಅಪಘಾತಗಳು ಸಂಭವಿಸುವುದರಿಂದ ಅವಕ್ಕೆ ಈಡಾದವರಿಗೆ ಕಾನೂನಿನ ಮೂಲಕ ಪರಿಹಾರ ದೊರಕಿಸಿಕೊಡಲಾಗುತ್ತದೆ. ಗಣಿ ಅಪಘಾತಗಳು ಮತ್ತು ಅವುಗಳ ಪರಿಣಾಮವಾಗಿ ಉಂಟಾಗುವ ಸಾವು, ಹಾನಿ ಇವುಗಳ ಬಗ್ಗೆ ಪ್ರತಿಯೊಂದು ರಾಷ್ಟ್ರದಲ್ಲೂ ಕರಾರುವಾಕ್ಕಾದ ಅಂಕೆ ಅಂಶಗಳನ್ನು, ಅಪಘಾತದ ವಿರುದ್ಧ ರಕ್ಷಣೆ ದೊರಕಿಸಿಕೊಡುವ ಉದ್ದೇಶದಿಂದ, ಸಂಗ್ರಹಿಸಲಾಗುತ್ತಿದೆ.

1956-1968ರಲ್ಲಿ ಭಾರತದಲ್ಲಿ ಸಂಭವಿಸಿದ ಗಣಿ ಅಪಘಾತಗಳನ್ನು ಕುರಿತ ವಿವರ ಈ ರೀತಿ ಇದೆ :
ವರ್ಷ,
ಅಪಘಾತಗಳ ಸಂಖ್ಯೆ,
ಕಾರ್ಮಿಕರ ಸಂಖ್ಯೆ,
ಪ್ರತಿ 1000 ಉದ್ಯೋಗಸ್ಧರಿಗೆ ಮರಣ ದರ,

ಪ್ರಾಣಾಪಾಯ,
ತೀವ್ರ ಅಪಾಯ,
ಮೃತರಾದವರು,
ತೀವ್ರವಾಗಿ ಗಾಯಗೊಂಡವರು,

1956
262
4138
335
4281
0.53

1961
289
5038
344
5173
0.51

1962
317
4828
368
4945
0.54

1963
286
3982
344
4110
0.49

1964
251
3266
287
3371
0.42

1965
246
3192
547
3298
0.79

1966
269
3096
319
3210
0.45

1967
259
2741
293
2837
0.43

1968
283
2611
337
2708
0.52

 ಮೇಲಿನ ಅಂಕೆ ಅಂಶಗಳಿಂದ ವ್ಯಕ್ತವಾಗುವಂತೆ ಅನೇಕ ಸುರಕ್ಷಣೆಯ ಕ್ರಮಗಳಿಂದಾಗಿ ಗಣಿ ಅಪಘಾತದಿಂದ ತೀವ್ರವಾಗಿ ಅಪಾಯಕ್ಕೀಡಾಗುವವರ ಸಂಖ್ಯೆ ಕಡಿಮೆಯಾಗುತ್ತ ಬಂದಿದೆ. ಭಾರತದಲ್ಲಿ ಕಲ್ಲಿದ್ದಲು ಗಣಿಗಳಲ್ಲಿ ಅತ್ಯಂತ ಹೆಚ್ಚಿನ ಅಪಘಾತಗಳು ನಡೆಯುತ್ತವೆ. ಚಾವಣಿ ಕುಸಿತ ಹೆಚ್ಚಿನ ಅಪಘಾತಗಳಿಗೆ ಕಾರಣವಾಗಿದೆ. ಅನಂತರದ ಕಾರಣಗಳೆಂದರೆ ಆಸ್ಫೋಟನೆಗಳು, ಗಣಿಯ ಒಳಗಣ ಸಾರಿಗೆ ಅಪಘಾತಗಳು, ವಿದ್ಯುತ್ ಅಪಾಯಗಳು ಇತ್ಯಾದಿ.

1952ರ ಗಣಿ ಕಾಯಿದೆ ಭಾರತದಲ್ಲಿ ಗಣಿ ಕಾರ್ಮಿಕರಿಗೆ ಅಪಘಾತಗಳ ವಿರುದ್ಧ ಅನೇಕ ರಕ್ಷಣೆಗಳನ್ನೊದಗಿಸಿಕೊಡುತ್ತಿದೆ. ಈ ಕಾಯಿದೆ ಗಣಿಗಳಲ್ಲಿ ಕಾರ್ಮಿಕರನ್ನು ಅಪಘಾತದಿಂದ ರಕ್ಷಿಸಲು ಯಾವ ಯಾವ ಸೌಲಭ್ಯಗಳನ್ನು ಅವರಿಗೆ ದೊರಕಿಸಿಕೊಡಬೇಕು ಎಂಬುದನ್ನು ವಿವರವಾಗಿ ಗೊತ್ತುಪಡಿಸಿದೆ. ಇದಲ್ಲದೆ 1963ರ ಜುಲೈಯಲ್ಲಿ ಗಣಿಗಳಲ್ಲಿ ಕಾರ್ಮಿಕ ಸಂರಕ್ಷಣೆಗಾಗಿ ಒಂದು ರಾಷ್ಟ್ರೀಯ ಸಮಿತಿಯನ್ನು ರಚಿಸಲಾಯಿತು. ಈ ಸಮಿತಿಯಲ್ಲಿ ಗಣಿ ಮಾಲೀಕರು, ಗಣಿ ಕಾರ್ಮಿಕರು ಮತ್ತು ವ್ಯವಸ್ಥಾಪಕರು ಪ್ರಾತಿನಿಧ್ಯ ಪಡೆದಿರುತ್ತಾರೆ. ಅಪಘಾತಗಳ ವಿರುದ್ಧ ಸಂರಕ್ಷಣೆಯ ಕ್ರಮಗಳ ಬಗ್ಗೆ ಕಾರ್ಮಿಕರಿಗೆ ತಿಳಿವಳಿಕೆ ನೀಡುವುದು ಈ ಸಮಿತಿಯ ಮುಖ್ಯ ಕಾರ್ಯ. ಗಣಿ ಅಪಘಾತಗಳ ಬಗ್ಗೆ ಪ್ರಸಾರ ಕಾರ್ಯ ಕೈಗೊಳ್ಳುವುದಲ್ಲದೆ, ಗಣಿ ಉದ್ಯಮಿಗಳಿಗೆ ಸರಿಯಾದ ತಿಳಿವಳಿಕೆ ಉಂಟಾಗುವಂತೆ ತರಬೇತು ಕೂಡ ನೀಡುತ್ತದೆ. ಈ ಬಗ್ಗೆ ಒಂದು ಮಾಸಿಕೆಯನ್ನೂ ಇದು ಪ್ರಕಟಿಸುತ್ತಿದೆ.
ಕಲ್ಲಿದ್ದಲು ಗಣಿಗಳ ನಿಯಮಗಳ ಪ್ರಕಾರ ಕಲ್ಲಿದ್ದಲು ಗಣಿಗಳಲ್ಲಿ ಅಪಾಯದ ವಿರುದ್ಧ ರಕ್ಷಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವು ಕಲ್ಲಿದ್ದಲು ಗಣಿಯಲ್ಲಿಯ ಸ್ಫೋಟ, ಬೆಂಕಿ ಮುಂತಾದ ಅಪಾಯಗಳ ವಿರುದ್ಧ ತತ್‍ಕ್ಷಣ ರಕ್ಷಣೆಯನ್ನೊದಗಿಸುತ್ತವೆ. 1923ರ ಕಾರ್ಮಿಕ ಪರಿಹಾರ ಕಾಯಿದೆ, 1948ರ ಉದ್ಯೋಗಿಗಳ ರಾಜ್ಯ ವಿಮಾ ಕಾಯಿದೆ ಇವು ತಮ್ಮ ವ್ಯಾಪ್ತಿಯೊಳಗೆ ಬರುವ ಗಣಿ ಕಾರ್ಮಿಕರಿಗೆ ಕೈಗಾರಿಕಾ ಅಪಘಾತದ ವಿರುದ್ಧ ಧನ ಪರಿಹಾರವನ್ನು ಒದಗಿಸುತ್ತವೆ. ಗಣಿ ಕಾರ್ಮಿಕ ರಕ್ಷಣೆಯ ಕ್ರಮಗಳನ್ನು ಜಾಗರೂಕತೆಯಿಂದ ಅನುಸರಿಸಿದಲ್ಲಿ ಗಣಿ ಅಪಘಾತಗಳ ಸಂಖ್ಯೆಯನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು ಎನ್ನುವ ಅಂಶ ಅನೇಕ ಅಧ್ಯಯನಗಳಿಂದಲೂ ಅನುಭವದಿಂದಲೂ ಬೆಳಕಿಗೆ ಬಂದಿದೆ.
(ನೋಡಿ- ಕೈಗಾರಿಕಾ-ಅಪಘಾತಗಳು)
(ಸಿ.ಕೆ.ಆರ್)